ಬೆಳಗಾವಿ: ಕಟ್ಟಣಭಾವಿ, ಕಡೋಲಿ ಸೇರಿದಂತೆ ತಾಲ್ಲೂಕಿನ ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಇಲ್ಲಿನ ಚನ್ನಮ್ಮ ವೃತ್ತದ ಸಮೀಪದ ಡಾ.ಬಿ.ಆರ್. ಅಂಬೇಡ್ಕರ್ ರಸ್ತೆಯಲ್ಲಿ ಎಐಡಿವೈಒ (ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್) ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ನಾಗರಿಕರು ಸೋಮವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿದರು.
‘ಶಾಲೆ–ಕಾಲೇಜುಗಳಿಗೆ ಬರುವಾಗ ಹಾಗೂ ತರಗತಿ ಮುಗಿಸಿ ವಾಪಸಾಗುವಾಗ ಸಕಾಲಕ್ಕೆ ಬಸ್ಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಬಸ್ಗಳ ಕಾರ್ಯಾಚರಣೆ ನಡೆಯುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳೊಂದಿಗೆ ಇತರ ಪ್ರಯಾಣಿಕರಿಗೂ ತೊಂದರೆಯಾಗುತ್ತಿದೆ. ಹೀಗಾಗಿ, ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.
ಪ್ರತಿಭಟನೆಯಿಂದಾಗಿ ಚನ್ನಮ್ಮ ವೃತ್ತದಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಸ್ಪಂದಿಸಿದ ಪೊಲೀಸರು, ಎನ್ಡಬ್ಲ್ಯುಕೆಆರ್ಟಿಸಿ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿದರು. ವಿದ್ಯಾರ್ಥಿಗಳಿಗೆ ಅವರಿಗೆ ಮನವಿ ಸಲ್ಲಿಸಿದರು. ಸ್ಪಂದಿಸಿದ ಅಧಿಕಾರಿಗಳು ಕೂಡಲೇ ಮೂರು ಬಸ್ಗಳ ವ್ಯವಸ್ಥೆ ಮಾಡಿದರು. ಅವುಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಿದರು. ಪ್ರತಿ ದಿನವೂ ಹೆಚ್ಚುವರಿ ಬಸ್ಗಳ ಕಾರ್ಯಾಚರಣೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಎಐಡಿವೈಒ ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಜು ಗಾಣಗಿ, ಋತಿಕ, ರಮಣ ಅಂಕಿತ್, ವಿಜಯಲಕ್ಷ್ಮಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.