ಬೆಳಗಾವಿ: ದೆಹಲಿಯಲ್ಲಿ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೈಗೊಂಡಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ರೈತ ಸಂಘಟನೆಯವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.
‘ರಾಷ್ಟ್ರ ರಾಜಧಾನಿಯಲ್ಲಿ ಹೋರಾಟನಿರತ ರೈತರ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ. ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಕೂಡಲೇ ಗೌರವ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಅಧ್ಯಕ್ಷ ಸಿದಗೌಡ ಮೋದಗಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗಣಿಕರ, ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಾಳಾಸಾಹೇಬ ಉದಗಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಮೀರಾ ಬೀರನ್ನವರ, ಖಾನಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಅರ್ಜುನ ಗಾವುಡ, ನೂರಪ್ಪ ಮಾದರ, ನೇಕಾರರ ಸಂಘದ ಸೋಮು, ರವಿ ಪಾಟೀಲ ಪಾಲ್ಗೊಂಡಿದ್ದರು.