ಬೆಳಗಾವಿ: ‘ವಿದ್ಯಾರ್ಥಿಗಳ ಆನ್ಲೈನ್ ತರಗತಿ ಅನುಕೂಲಕ್ಕಾಗಿ ಟ್ಯಾಬ್ (ಟ್ಯಾಬ್ಲೆಟ್ ಪಿಸಿ)ಗಳನ್ನು ವಿತರಣೆ ಮಾಡಲಾಗುತ್ತಿದೆ. ಮಕ್ಕಳು ಅವುಗಳನ್ನು ಬಳಸಿಕೊಂಡು ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಲಹೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಬುಧವಾರ ಟ್ಯಾಬ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಆನ್ಲೈನ್ ತರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಂಕಷ್ಟದ ಕಾಲದಲ್ಲೂ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 430 ಕಾಲೇಜು ಹಾಗೂ ಜಿಲ್ಲೆಯಲ್ಲಿ 22 ಕಾಲೇಜು ವಿದ್ಯಾರ್ಥಿಗಳಿಗೆ ಕೊಡಲಾಗುತ್ತಿದೆ. ಒಟ್ಟು 6,020 ವಿದ್ಯಾರ್ಥಿಗಳಿಗೆ ತಲಾ ₹ 14ಸಾವಿರ ಆಂದಾಜು ಮೊತ್ತದ ಟ್ಯಾಬ್ ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ನಮ್ಮ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಕಳೆದ ವರ್ಷ ಲ್ಯಾಪ್ಟ್ಯಾಪ್ ವಿತರಣೆ ಮಾಡಲಾಗಿತ್ತು. ಆದರೆ, ಈ ವರ್ಷ ಮತ್ತೆ ಕೋವಿಡ್ ಸಂಕಷ್ಟ ಎದುರಾಗಿದ್ದು, ವಿದ್ಯಾರ್ಥಿಗಳಿಗೆ ಕಲಿಕೆಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ’ ಎಂದರು.
ಉತ್ತರ ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್.ವಿ. ದರ್ಶನ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಇದ್ದರು.
ಪ್ರಾಂಶುಪಾಲ ಪ್ರೊ.ಸಿ. ಈಶ್ವರಚಂದ್ರ ಸ್ವಾಗತಿಸಿದರು. ಪ್ರೊ.ಮಂಜುನಾಥ ಪೂಜೇರಿ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.