ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕನ್ನಡ ಕಡೆಗಣನೆ

ಹಿಂದಿ, ಇಂಗ್ಲಿಷ್‌ಗೆ ಮಣೆ: ಅಸಮಾಧಾನ
Last Updated 29 ನವೆಂಬರ್ 2020, 7:16 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಹಾಕಲಾಗಿರುವ ಸೂಚನಾ ಫಲಕಗಳು, ಕೋವಿಡ್–19 ಮುಂಜಾಗ್ರತಾ ಕ್ರಮಗಳ ಪ್ರಚಾರ ಸಾಮಗ್ರಿಗಳು ಬ್ಯಾರಿಕೇಡ್‌ಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‌ಗೆ ಮಣೆ ಹಾಕುವ ಮೂಲಕ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ. ಇದು ಇಲ್ಲಿನ ಕನ್ನಡ ಮನಸ್ಸುಗಳ ಆಕ್ಷೇಪ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ.

ಗಡಿ ನಾಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಅಲ್ಲಿನ ಅಧಿಕಾರಿಗಳ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟ್‌ಗಳನ್ನು ಹಾಕಲಾಗಿದೆ.

‘ವಿಮಾನನಿಲ್ದಾಣದ ಅಧಿಕಾರಿಗಳು ಇಂಗ್ಲಿಷ್ ಹಾಗೂ ಹಿಂದಿಗೆ ಮಣೆ ಹಾಕಿದ್ದಾರೆ. ಕನ್ನಡವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಅಧಿಕಾರಿಗಳು, ಕೂಡಲೇ ಕನ್ನಡ ಬಳಸದಿದ್ದರೆ ಇದರ ವಿರುದ್ಧ ನಾವು ಗಟ್ಟಿ ಧ್ವನಿ ಎತ್ತಬೇಕಾಗುತ್ತದೆ’ ಎಂಬ ಹೇಳಿಕೆಗಳುಳ್ಳ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಸಂಗತಿಯನ್ನು ‘ಬೆಳಗಾವಿ ಪುಟ’ದವರು ಟ್ವೀಟ್‌ ಮತ್ತು ಫೇಸ್‌ಬುಕ್‌ ಪೋಸ್ಟ್‌ ಮೂಲಕ ವಿಮಾನನಿಲ್ದಾಣದ ಅಧಿಕಾರಿಗಳ ಗಮನಕ್ಕೂ ತಂದಿದ್ದಾರೆ.

‘ಕನ್ನಡ ನೆಲದಲ್ಲಿ ಕನ್ನಡಕ್ಕೆ ಆದ್ಯತೆ ಕೊಡದಿರುವುದು ದುರಂತ. ಹಿಂದಿ ಅಥವಾ ಇಂಗ್ಲಿಷ್ ಹೇರಿಕೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು’ ಎಂದು ತಿಳಿಸಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡಿರುವ ವಿಮಾನನಿಲ್ದಾಣದ ನಿರ್ದೇಶಕ ರಾಜೇಶ್‌ಕುಮಾರ್‌ ಮೌರ್ಯ, ‘ವಿಮಾನನಿಲ್ದಾಣದಲ್ಲಿ ಹಿಂದಿ ಬಳಕೆ ಬಗ್ಗೆ ಕೆಲವರು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಗಮನಿಸಿದ್ದೇನೆ. ನಾವು ಪ್ರತಿಯೊಬ್ಬರ ಭಾವನೆಗಳನ್ನೂ ಗೌರವಿಸುತ್ತೇವೆ. ಹಳೆಯ ಬ್ಯಾನರ್‌ಗಳನ್ನು ತೆರವುಗೊಳಿಸಲಾಗವುದು. ಕನ್ನಡಕ್ಕೆ ಆದ್ಯತೆ ನೀಡಿದ ಪ್ರಚಾರ ಸಾಮಗ್ರಿಗಳು ಮತ್ತು ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಸ್ವಲ್ಪ ಸಮಯಾವಕಾಶ ಕೊಡಿ’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT