ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಸದಸ್ಯರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲ ಹಲಗಿ ಮಾತನಾಡಿ, ‘ಜಿಲ್ಲೆಯಲ್ಲಿ ಅನೇಕರು ಬೀದಿ ಬದಿ ವ್ಯಾಪಾರ ಮಾಡುತ್ತಿದ್ದು, ನಿಜವಾದ ವ್ಯಾಪಾರಿಗಳಿಗೆ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ, ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಕೈಗೊಳ್ಳಬೇಕು. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಹಾಗೂ ಸಂರಕ್ಷಣೆ ಮತ್ತು ನಿಯಂತ್ರಣ ಅಧಿನಿಯಮ 2014ರ ಕಾಯ್ದೆ ಅನ್ವಯ ವ್ಯಾಪಾರಿಗಳಿಗೆ ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರ ವಿತರಿಸಬೇಕು’ ಎಂದು ಒತ್ತಾಯಿಸಿದರು.
‘ಬೀದಿ ಬದಿ ವ್ಯಾಪಾರ ಮಾಡುವ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ರಾಷ್ಟ್ರೀಯ ಸ್ವಾಸ್ಥ ವಿಮಾ ಯೋಜನೆ, ಪಿಂಚಣಿ, ವಸತಿ, ಗೋಧಾಮು ಹಾಗೂ ಇನ್ನಿತರ ಸೌಲಭ್ಯ ಒದಗಿಸಬೇಕು. ಪಾಲಿಕೆಯ ಬಜೆಟ್ನಲ್ಲಿ ವ್ಯಾಪಾರಿಗಳಿಗೆ ಶೇ 1ರಷ್ಟು ಅನುದಾನ ಮೀಸಲಿಡಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಂದ ವ್ಯಾಪಾರಿಗಳಿಗೆ ಉಂಟಾಗುತ್ತಿರುವ ಕಿರಿಕಿರಿ ತಪ್ಪಿಸಬೇಕು’ ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಉಪಾಧ್ಯಕ್ಷ ಶೌಕತ್ ಕಾಗಜಿ, ಕಾರ್ಯದರ್ಶಿ ಅನ್ವರ್ ಬಾಗವಾನ, ವಕೀಲ ಮಹಾಂತೇಶ ಮಠದ, ಅಮಜದಖಾನ್ ಬಕ್ಷಿ, ಸಾಗರ ದೇಸೂರಕರ್, ಅಸ್ಲಾಂ ಬಾಳಿಕಟ್ಟಿ, ಗಂಗಪ್ಪ ದುಮನಾಯ್ಕ್, ಸತ್ತೆಪ್ಪ ತಳವಾರ ಇದ್ದರು.