ಬೆಳಗಾವಿ: ‘ಸೋಯಾಬೀನ್ ಬಿತ್ತನೆ ಬೀಜಗಳು ಸರಿಯಾಗಿ ಮೊಳಕೆ ಬಾರದೆ ನಷ್ಟ ಅನುಭವಿಸಿರುವ ರೈತರಿಗೆ ಎಕರೆಗೆ ₹ 3ಸಾವಿರ ಪರಿಹಾರವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಿಂದ ಪರಿಹಾರ ಕೊಡುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದರು.
‘ಜಿಲ್ಲೆಯಲ್ಲಿ 7,700 ಎಕರೆ ಪ್ರದೇಶದಲ್ಲಿ ಬಿತ್ತನೆ ಸೋಯಾಬೀನ್ ಬೀಜಗಳು ಸಮರ್ಪಕವಾಗಿ ಮೊಳಕೆ ಬಾರದಿರುವ ಕುರಿತು ವರದಿ ಬಂದಿದೆ. ರಾಜ್ಯದ ಇತರ ಜಿಲ್ಲೆಗಳ ಮಾಹಿತಿ ಇನ್ನೂ ದೊರೆತಿಲ್ಲ. ಈ ಹಂಗಾಮಿನಲ್ಲಿ ಮೊಳಕೆ ಪ್ರಮಾಣ ಕಡಿಮೆ ಇರಲಿದೆ ಎಂದು ರೈತರಿಗೆ ಮೊದಲೇ ತಿಳಿಸಿದ್ದೆವು’ ಎಂದು ಹೇಳಿದರು.
‘ಯೂರಿಯಾ ಮೊದಲಾದ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಯೂರಿಯಾ ಮಾರುತ್ತಿದ್ದ 117 ರಸಗೊಬ್ಬರ ಅಂಗಡಿಗಳ ಪರವಾನಗಿ ರದ್ದುಪಡಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.