ಬೆಳಗಾವಿ: ‘ಗ್ರಾಮೀಣ ಕ್ಷೇತ್ರದ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮಕ್ಕಳು ಸುರಕ್ಷತೆಯೊಂದಿಗೆ ಶಿಕ್ಷಣ ಕಲಿಯುವಂತೆ ಗಮನಹರಿಸಲಾಗುತ್ತಿದೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಕ್ಷೇತ್ರದ ದೇಸೂರ ಗ್ರಾಮದ ಹಿರಿಯ ಮರಾಠಿ ಪ್ರಾಥಮಿಕ ಸರ್ಕಾರಿ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಪ್ರವಾಹ ಹಾಗೂ ಅತಿವೃಷ್ಟಿಯಂತಹ ಪ್ರಕೃತಿ ವಿಕೋಪ ನಮ್ಮ ಮೇಲೆ ಪ್ರಹಾರ ಮಾಡುತ್ತಿರುವ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಅತಿ ಮುಖ್ಯವಾಗಿದೆ. ಶಿಕ್ಷಣ ಎಷ್ಟು ಮುಖ್ಯವೋ ಸುರಕ್ಷತೆ ಅದಕ್ಕಿಂತ ಹೆಚ್ಚು ಮಹತ್ವದ್ದಾಗಿದೆ. ಹಾಗಾಗಿ ಸುಸಜ್ಜಿತ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ’ ಎಂದು ತಿಳಿಸಿದರು.
ಗ್ರಾಮದ ಹಿರಿಯರು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಜನಪ್ರತಿನಿಧಿಗಳು, ಶಾಲಾ ಸಿಬ್ಬಂದಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.