ಬೆಳಗಾವಿ: ‘ಆತ್ಮಹತ್ಯೆಯಿಂದ ಯಾವುದೇ ಸಮಸ್ಯೆಗೂ ಪರಿಹಾರ ದೊರೆಯುವುದಿಲ್ಲ’ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಹೇಳಿದರು.
ಇಲ್ಲಿನ ವಡಗಾವಿಯಲ್ಲಿ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಮಾನಸಿಕ ರೋಗ ಚಿಕಿತ್ಸಾ ವಿಭಾಗದ ವತಿಯಿಂದ ಈಚೆಗೆ ಆಯೋಜಿಸಿದ್ದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸಮೀಕ್ಷೆ ಪ್ರಕಾರ, ಭಾರತದ ಒಟ್ಟು ಜನಸಂಖ್ಯೆಯ ಶೇ. 15ರಷ್ಟು ಮಂದಿ ವಿವಿಧ ರೀತಿಯ ಮಾನಸಿಕ ತೊಂದರೆಗಳಿಗೆ ಒಳಗಾದವರಾಗಿದ್ದಾರೆ’ ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಚಾಂದನಿ ದೇವಡಿ, ‘ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇದ್ದೇ ಇರುತ್ತದೆ. ಸಮಾಧಾನದಿಂದ ತಿಳಿದು ನಡೆದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. ಈ ನಿಟ್ಟಿನಲ್ಲಿ ಸರ್ಕಾರವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ’ ಎಂದರು.
ಮಲ್ಲಿಕಾರ್ಜುನ ದೇವಸ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ಬಸರಾಜ ಅತ್ತಿಮರದ ಮಾತನಾಡಿದರು. ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಡಾ.ಅಶ್ವಿನಿ ಪದ್ಮಶಾಲಿ ಉಪನ್ಯಾಸ ನೀಡಿದರು.
ಡಾ.ಸುಚೇತಾ ವಾಘಮಾರೆ, ಡಾ.ಅಂಟೋನಿಯೋ ಕರವ್ಹಾಲೊ, ಮಲ್ಲಿಕಾರ್ಜುನ ದೇವಸ್ಥಾನ ಟ್ರಸ್ಟ್ ಸಮಿತಿಯ ಉಪಾಧ್ಯಕ್ಷ ಶ್ರೀಧರ ತಿಗಡಿ ಇದ್ದರು.