ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ 2012ರ ಡಿಸೆಂಬರ್ 11 ರಂದು ಅಧಿವೇಶನ ನಡೆದ ಸಂದರ್ಭದಲ್ಲಿ ಮುತ್ತಿಗೆ ಹಾಕಿದ ಪ್ರತಿಭಟನಾಕಾರರ ಮೇಲೆ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಕರಾಳ ದಿನವನ್ನು ಆಚರಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ನಡೆದ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕು. ಅಂದು ಜಖಂ ಗೊಳಿಸಿದ ಎಲ್ಲ ವಾಹನಗಳ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿತ್ತು. ಆದರೆ, ಪೊಲೀಸರು ಲಾಠಿ ಚಾರ್ಜ್ ನಡೆಸಿ ನೂರಾರು ಜನರನ್ನು ಗಾಯಗೊಳಿಸಿದರು. ಪ್ರತಿಭಟನಾಕಾರರು ಬಾಡಿಗೆಗೆ ತಂದಿದ್ದ ಸುಮಾರು 300 ವಾಹನಗಳನ್ನು ಪೊಲೀಸರು ಜಖಂಗೊಳಿಸಿದರು ಎಂದು ಪ್ರತಿಭಟನಾಕಾರರು ದೂರಿದರು.
ಕಳೆದ ವಾರ ನಡೆದ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗಿ ಸಮಾಜ ಕಲ್ಯಾಣ ಸಚಿವರು ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಭರವಸೆ ನೀಡಿದ್ದಾರೆ. ನ್ಯಾ. ಸದಾಶಿವ ಆಯೋಗದ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ಸಹ ನೀಡಿದ್ದಾರೆ. ಆದ್ದರಿಂದ ಕೂಡಲೇ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು. ಮುಂಬರುವ ಲೋಕಸಭೆ ಚುನಾವಣೆಯೊಳಗೆ ನ್ಯಾ. ಸದಾಶಿವ ಆಯೋಗದ ವರದಿ ಸ್ವೀಕರಿಸಿ ವರ್ಗೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಐಇಸಲಾಗಿದೆ.
ಪ್ರತಿಭಟನೆಗೂ ಮುನ್ನ ಮಂಗಳವಾರ ನಿಧನರಾದ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಿ ಸಂತಾಪ ಸೂಚಿಸಲಾಯಿತು. ಶಂಕರ ದೊಡಮನಿ, ರಾಜೇಂದ್ರ ಐಹೊಳೆ, ಯಲ್ಲೇಶ ಬಚ್ಚಲಪೂರೆ, ಯಲ್ಲಪ್ಪ ಹುದಲಿ, ರವಿ ಸಣ್ಣಕ್ಕಿ, ರಾವಸಾಬ್ ಐಹೊಳೆ. ಸುರೇಶ ಈರಗಾರ, ರಾಜು ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಸಿರಿಗನ್ನಡ ವೇದಿಕೆ ಸಭೆ 15ರಂದು
ರಾಮದುರ್ಗ: ಸಿರಿಗನ್ನಡ ವೇದಿಕೆ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ಸದಸ್ಯರನ್ನು ಆಯ್ಕೆಗಾಗಿ ಇದೇ 15 ರಂದು ಬೆಳಿಗ್ಗೆ 10ಕ್ಕೆ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಸಭೆ ಕರೆಯಲಾಗಿದೆ. ಆಸಕ್ತ ಕವಿಗಳು, ಸಾಹಿತಿಗಳು, ಕಥೆಗಾರರ, ಚುಟುಕು ಸಾಹಿತಿಗಳು, ಕನ್ನಡ ಪ್ರೇಮಿಗಳು, ಕನ್ನಡ ಅಬಿಮಾನಿಗಳು ಸಭೆಗೆ ಆಗಮಿಸಿ ಕಾರ್ಯಕಾರಿ ಮಂಡಳಿಯ ಸದಸ್ಯರನ್ನು ಆಯ್ಕೆಗೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ತಾಲ್ಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಚ್.ಆರ್. ಭೂಮರಡ್ಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.