ಹಿರೇಬಾಗೇವಾಡಿ:‘ರಾಜ್ಯ ಸರ್ಕಾರದ ಸಚಿವರು ಕಮಿಷನ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಆ ಪಕ್ಷದ ಶಾಸಕಾಂಗ ಸಭೆಯಲ್ಲಿ ಸಚಿವ ಎಚ್.ಆಂಜನೇಯ ವಿರುದ್ಧ ಪಕ್ಷದವರೇ ಈ ಆರೋಪ ಮಾಡಿದ್ದಾರೆ. ಕಮಿಷನ್ ಪಾಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹೋಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
ಬೆಳಗಾವಿ ಗ್ರಾಮೀಣ ಬಿಜೆಪಿ ವಿಧಾನಸಭಾ ವತಿಯಿಂದ ಇಲ್ಲಿ ಏರ್ಪಡಿಸಲಾದ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಛತ್ತೀಸ್ಗಢದ ಮುಖ್ಯಮಂತ್ರಿ ರಮಣ್ಸಿಂಗ್ ಮಾತನಾಡಿ, ಭಾರತ ಶಕ್ತಿಶಾಲಿ ರಾಷ್ಟ್ರವಾಗಿದೆ. ನಮ್ಮತ್ತ ಯಾರಾದರೂ ಕೆಟ್ಟ ದೃಷ್ಟಿಯಿಂದ ನೋಡಿದರೆ ಏನಾಗುತ್ತದೆ ಎನ್ನುವುದನ್ನು ಸರ್ಜಿಕಲ್ ದಾಳಿಯ ಮೂಲಕ ಪ್ರಧಾನಿಯವರು ತೋರಿಸಿಕೊಟ್ಟಿದ್ದಾರೆ ಎಂದರು.
ಕೇಂದ್ರ ಸಚಿವ ಅನಂತಕುಮಾರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಆರೋಪಿಸಿದರು. ಗ್ರಾಮೀಣ ಶಾಸಕ ಸಂಜಯ ಪಾಟೀಲ ಮಾತನಾಡಿ, ರಾಜ್ಯವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಬೇರು ಸಮೇತ ಕಿತ್ತೆಸೆಯುವುದೇ ಪರಿವರ್ತನಾ ಯಾತ್ರೆಯ ಉದ್ದೇಶ ಎಂದರು. ಸಂಸದೆ ಶೋಭಾ ಕರಂದ್ಲಾಚೆ ಮಾತನಾಡಿದರು.