ಬೆಳಗಾವಿ: ಬಳ್ಳಾರಿ ನಾಲಾ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ನಾಲಾ ಸಮೀಪದ ಹೊಲಗಳಿಗೆ ಶುದ್ಧೀ ಕರಿಸಿದ ನೀರು ಹರಿಸುವ ಮೂಲಕ ಜನರ ಆರೋಗ್ಯಕ್ಕೂ ಮಹತ್ವ ನೀಡ ಬೇಕು ಎಂದು ಲೋಕ ಅದಾಲತ್ ಸದಸ್ಯ ಡಾ. ಎ.ಎನ್.ಯಲ್ಲಪ್ಪ ರೆಡ್ಡಿ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಭವನದಲ್ಲಿ ಮಂಗಳ ವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಳ್ಳಾರಿ ನಾಲಾದ ಬರುವ ಕಲುಷಿತ ನೀರಿನಲ್ಲಿ ಹಲವು ರಾಸಾ ಯನಿಕಗಳಿದ್ದು, ಅವುಗಳು ನಿಸರ್ಗದ ಮೇಲೆ ದುಷ್ಪರಿಣಾಮ ಬೀರುತ್ತಿವೆ. ರೈತರು ಇದೇ ನೀರನ್ನು ಬಳಸಿ ಬೇಸಾಯ ಮಾಡುತ್ತಿರುವದರಿಂದ ಗುಣಮಟ್ಟದ ಆಹಾರ ಉತ್ಪನ್ನಗಳು ಬೆಳೆಯುತ್ತಿಲ್ಲ. ಹೀಗಾಗಿ ಅಲ್ಲಿನ ರೈತರಿಗೆ ಶುದ್ಧೀಕರಿಸಿದ ನೀರು ಒದಗಿಸುವ ಅಗತ್ಯವಿದ್ದು, ಈ ಹಿನ್ನೆಲೆ ಯಲ್ಲಿ ಒಂದು ಯೋಜನೆ ಸಿದ್ಧಪಡಿಸ ಬೇಕು. ಶೀಘ್ರದಲ್ಲಿ ರೈತರ ಜಮೀನು ಗಳಿಗೆ ಶುದ್ಧೀಕರಿಸಿದ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಲುಷಿತ ನೀರು ಸೇವನೆಯಿಂದ ಹಲವಾರು ರೋಗರುಜಿನಗಳು ಅಂಟಿಕೊಳ್ಳುತ್ತಿವೆ. ಹೀಗಾಗಿ ಬಳ್ಳಾರಿ ನಾಲೆಯನ್ನು ಅಭಿವೃದ್ಧಿಪಡಿಸುವ ಮೂಲಕ ರೈತರ ಎಲ್ಲ ಜಮೀನುಗಳಿಗೆ ಶುದ್ಧೀಕರಿಸಿದ ನೀರು ಪೂರೈಸಬೇಕು ಎಂದರು. ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗಳು ಹೊರ ಹಾಕುವ ತ್ಯಾಜವನ್ನು ನಿಯಂತ್ರಣ ಮಾಡುತ್ತಿಲ್ಲ, ಬದಲಾಗಿ ಕಾರ್ಖಾನೆ ಗಳಿಗೆ ಅನುಕೂಲ ವಾಗುವ ರೀತಿಯಲ್ಲಿ ವರ್ತಿಸುತ್ತಿವೆ. ಇದರಿಂದಾಗಿ ಪರಿಸರ ಕಲುಷಿತವಾಗುತ್ತಿದ್ದು, ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಜರುಗಿಸಬೇಕು. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಬಳ್ಳಾರಿ ನಾಲಾ ಕಲುಷಿತ ನೀರಿನಲ್ಲಿ ಬರುವ ರಸಾಯನಿಕಗಳನ್ನು ಪತ್ತೆ ಹಚ್ಚಲು ಬೇಕಾದ ವ್ಯವಸ್ಥೆ ಮಾಡಿ ಕೊಳ್ಳಬೇಕು. ಕಸಾಯಿ ಖಾನೆಯಿಂದ ಹೊರ ಬರುವ ತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಖಾನೆಗಳು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ನಗರದ ಎಲ್ಲ ಉದ್ಯಾನಗಳಲ್ಲಿ ಎತ್ತರದ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ಸಭೆ ಯಲ್ಲಿ ಚರ್ಚಿಸಲಾದ ವಿಷಯಗಳನ್ನು ಅನುಷ್ಠಾನಗೊಳಿಸಲು ಕೈಗೊಂಡ ಕ್ರಮಗಳ ಕುರಿತು ಸೆ. 28 ಕ್ಕೆ ವರದಿ ನೀಡಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಎನ್.ಜಯರಾಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತೆ ಪ್ರಿಯಾಂಕಾ ಫ್ರಾನ್ಸಿಸ್ ಉಪಸ್ಥಿತರಿದ್ದರು.