ಮುಂಡರಗಿ: ‘ಕುಷ್ಠರೋಗ ನಿವಾರಣೆಗಾಗಿ ಆರೋಗ್ಯ ಇಲಾಖೆಯು ಕಳೆದ ಹಲವು ದಶಕಗಳಿಂದ ನಿರಂತರವಾಗಿ ಹೋರಾಡುತ್ತಿದೆ. ಇಲಾಖೆ ಹಾಕಿಕೊಳ್ಳುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸ್ಪಂದಿಸಬೇಕು’ ಎಂದು ತಹಶೀಲ್ದಾರ್ ಭ್ರಮರಾಂಬಾ ಗುಬ್ಬಿಶೆಟ್ಟಿ ಸಲಹೆ ನೀಡಿದರು.
ತಾಲ್ಲೂಕು ಪಂಚಾಯ್ತಿ, ಆರೋಗ್ಯ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೊದಲಾದ ಇಲಾಖೆಗಳು ಗುರುವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕುಷ್ಠರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ಸಮೀಪದ ವೈದ್ಯರಲ್ಲಿ ತಪಾಸಣೆ ಮಾಡಿಸಬೇಕು. ನಿಯಮಿತವಾಗಿ ಔಷಧೋಪಚಾರ ಪಡೆದುಕೊಂಡರೆ ಕುಷ್ಠರೋಗ ನಿವಾರಣೆಯಾಗುತ್ತದೆ’ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರ ಹಳ್ಳಿಗುಡಿ ಮಾತನಾಡಿದರು.
ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಬಿ.ಎನ್.ರಾಟಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಭಾಷಚಂದ್ರ ದೈಗೊಂಡ, ಎಸ್.ಐ.ಪರಪ್ಪನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಸ್.ಸಜ್ಜನರ, ಎಸ್.ಎಸ್.ಕುಬಸದ, ಎನ್.ಬಿ.ಅಳವುಂಡಿ ಮತ್ತು ಇತರರು ಹಾಜರಿದ್ದರು.