ಹೊಸಪೇಟೆ: ’ಜಿಂದಾಲ್ ಜಮೀನು ಮಾರಾಟ ಮಾಡುವುದರ ವಿರುದ್ಧ ಆನಂದ್ ಸಿಂಗ್ ನಡೆಸುತ್ತಿರುವ ಹೋರಾಟ ತೀರ ವೈಯಕ್ತಿಕವಾದುದು. ಅದು ಅವರ ಖಾಸಗಿ ವಿಚಾರ. ಹಾಗೆಂದ ಕೂಡಲೇ ಅವರು ಬಿಜೆಪಿ ಸೇರುತ್ತಾರೆ ಎಂದು ಭಾವಿಸಬೇಕಿಲ್ಲ‘ ಎಂದು ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಹೇಳಿದರು.
ಮಂಗಳವಾರ ಇಲ್ಲಿನ ಅಂಜುಮನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.
’ಜಿಂದಾಲ್ ಭೂ ಪರಭಾರೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಭಿನ್ನಾಭಿಪ್ರಾಯ ಇರಬಹುದು. ಆದರೆ, ಬಿಜೆಪಿಯ ಆಪರೇಷನ್ ಕಮಲಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಯಾವ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ರಾಜ್ಯದ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ‘ ಎಂದರು.