ಬಳ್ಳಾರಿ: ಬೈಕ್ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂರು ವರ್ಷದ ಬಾಲಕಿ ತೀವ್ರವಾಗಿ ಗಾಯಗೊಂಡ ಘಟನೆ ಕೌಲ್ ಬಜಾರ್ ಮೇಲ್ಸೆತುವೆ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ವೀರೇಶ್ (35), ಆತನ ಪತ್ನಿ ಅಂಜಲಿ(30), ಮಗ ದಿನೇಶ್ (5) ಎಂದು ಗುರುತಿಸಲಾಗಿದೆ. ಈ ದಂಪತಿಯ ಪುತ್ರಿ ಆದ್ಯಳನ್ನು ವಿಮ್ಸ್ಗೆ ದಾಖಲಿಸಲಾಗಿದೆ. ವೀರೇಶ್ ಚೇಳ್ಳಗುರ್ಕಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.
ವೀರೇಶ್ ಯರಗುಡಿಯಿಂದ ಬಳ್ಳಾರಿ ಗಫೂರ್ ಟವರ್ ಬಳಿಯ ಮನೆಗೆ ಬೈಕ್ನಲ್ಲಿ ಬರುತ್ತಿರುವಾಗ ಏಳು ಮಕ್ಕಳ ತಾಯಮ್ಮ ಗುಡಿ ಸಮೀಪ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.