ಹೊಸಪೇಟೆ: ಇತ್ತೀಚೆಗೆ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಪುರಸಭೆ ಚುನಾವಣೆವೇಳೆ ಶಾಸಕ ಭೀಮಾ ನಾಯ್ಕ ಅವರು ಪಕ್ಷದ ಕಾರ್ಯಕರ್ತರಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಳಿಕ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಪಕ್ಷದ ಕಚೇರಿಯಿಂದ ರೋಟರಿ ವೃತ್ತದ ವರೆಗೆ ರ್ಯಾಲಿ ನಡೆಸಿದರು.
ಬಳಿಕ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ‘ಶಾಸಕ ಭೀಮಾ ನಾಯ್ಕ ಅವರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನಾರ್ಹ. ಅವರನ್ನು ಶಾಸಕ ಸ್ಥಾನದಿಂದ ಚುನಾವಣಾ ಆಯೋಗ ಉಚ್ಚಾಟಿಸಬೇಕು. ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಬಸವರಾಜ, ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಮುಖಂಡರಾದ ಕಟಿಗಿ ರಾಮಕೃಷ್ಣ, ಶಶಿಧರ ಸ್ವಾಮಿ, ಪ್ರಶಾಂತ್ ಕಡ್ಡಿರಾಂಪುರ, ಬಸವರಾಜ್, ಶಂಕರ್ ಮೇಟಿ ಇದ್ದರು.