ಹೊಸಪೇಟೆ: ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದವರು ಗುರುವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮುಖ್ಯಾಧಿಕಾರಿ ಅಭಯ ಕುಮಾರ ಅವರು ಕಚೇರಿ ಕೆಲಸದಲ್ಲಿ ತೊಡಗಿದ್ದಾಗ ಅಲ್ಲಿನ ಪುರಸಭೆ ಸದಸ್ಯ ಆನಂದ್ ನಾಗಪ್ಪ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಇದು ಹೇಯ ಕೃತ್ಯ. ಸರ್ಕಾರಿ ಕಚೇರಿ ಕೆಲಸಕ್ಕೆ ಅಡ್ಡಿಪಡಿಸಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅದಕ್ಕೆ ಚಿಂಚೋಳಿ ಘಟನೆ ತಾಜಾ ಉದಾಹರಣೆ. ಭಯದ ವಾತಾವರಣದಲ್ಲಿ ಕೆಲಸ ನಿರ್ವಹಿಸುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಧಿಕಾರಿ, ಸಿಬ್ಬಂದಿ ವರ್ಗ ಮುಕ್ತವಾಗಿ ಕೆಲಸ ಮಾಡುವಂತಹ ವಾತಾವರಣ ಸರ್ಕಾರ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಂಘದ ಅಧ್ಯಕ್ಷ ವೈ. ನಾಗಪ್ಪ, ಉಪಾಧ್ಯಕ್ಷರಾದ ವೈ. ಸುಂಕಪ್ಪ, ದೇವೇಂದ್ರ, ಪ್ರಧಾನ ಕಾರ್ಯದರ್ಶಿ ಮಾರಣ್ಣ, ವೆಂಕಟೇಶ ಸೇರಿದಂತೆ ಇತರರಿದ್ದರು.