ಹೊಸಪೇಟೆ (ವಿಜಯನಗರ): ಬಾಗಲಕೋಟೆಯ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ತಾಲ್ಲೂಕು ಬಾರ್ ಅಸೋಸಿಯೇಷನ್ನವರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಮಹಾಂತೇಶ ಚೊಳಚಗುಡ್ಡ ಎಂಬುವರು ಹಲ್ಲೆ ನಡೆಸಿ, ದೌರ್ಜನ್ಯವೆಸಗಿರುವುದು ಖಂಡನೀಯವಾಗಿದೆ. ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು. ವಕೀಲರಿಗೆ ಸೂಕ್ತ ಕಾನೂನು ರಕ್ಷಣೆ ಒದಗಿಸಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಉಸ್ತುವಾರಿಯಲ್ಲಿ ತನಿಖೆ ಕೈಗೊಳ್ಳಬೇಕು. ಸಂತ್ರಸ್ತೆಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು. ವಕೀಲರ ಸಂರಕ್ಷಣಾ ಕಾಯ್ದೆಯನ್ನು ನಿಗದಿತ ಅವಧಿಯೊಳಗೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಬಾರ್ ಅಸೋಸಿಯೇಷನ್ ಅಧ್ಯಕ್ಷ ಕೆ.ವಿ. ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ಎಚ್.ಮಹೇಶ್, ಆರ್.ರಮೇಶಗೌಡ, ಕೆ.ಸದಾನಂದ, ಖಾದರ್ ವಲಿ, ಪೂರ್ಣಿಮಾ, ತ್ರಿವೇಣಿ, ಮಂಜುಶ್ರೀ, ಚಾಮುಂಡೇಶ್ವರಿ ಇದ್ದರು.