ಕಟ್ಟಡ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಹೊಸಪೇಟೆ (ವಿಜಯನಗರ): ಕಟ್ಟಡ ಕಾರ್ಮಿಕರಿಗೆ ₹10,000 ಕೋವಿಡ್ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ಗುರುವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ₹10,000 ಕೋಟಿ ಸೆಸ್ ಸಂಗ್ರಹವಾಗಿದೆ. ಹೀಗಿದ್ದರೂ ಸರ್ಕಾರ ಒಬ್ಬ ಕಾರ್ಮಿಕನಿಗೆ ₹3,000 ಪರಿಹಾರ ಘೋಷಿಸಿರುವುದು ಎಷ್ಟು ಸರಿ. ಪ್ರತಿಯೊಬ್ಬ ಕಾರ್ಮಿಕನಿಗೂ ತಲಾ ₹10,000 ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್ಗೆ ಸಲ್ಲಿಸಿ ಒತ್ತಾಯಿಸಿದರು.
ರಾಜ್ಯದಲ್ಲಿ ಸುಮಾರು ಮೂರು ಕೋಟಿ ಜನ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೋವಿಡ್ ಲಾಕ್ಡೌನ್ನಿಂದ ಅವರು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ₹100ರಿಂದ ₹125 ಕೋಟಿ ಹಣ ಬಿಡುಗಡೆ ಮಾಡಿ ಸಾಮಾಜಿಕ ಭದ್ರತೆಗೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ಕಟ್ಟಡ ಕಾರ್ಮಿಕರಿಗೂ ರೇಷನ್ ಕಿಟ್ ವಿತರಿಸಬೇಕು. ಕೋವಿಡ್ ಸೇನಾನಿಗಳಿಗೂ ಆರ್ಥಿಕ ಭದ್ರತೆ ಒದಗಿಸಬೇಕು. ಸಾರಿಗೆ ನೌಕರರ ಮೇಲಿನ ಎಸ್ಮಾ ಕಾನೂನು ವಿಸ್ತರಣೆ ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಅಧ್ಯಕ್ಷ ಆರ್. ಭಾಸ್ಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ. ಗೋಪಾಲ್, ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ, ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಎನ್. ಯಲ್ಲಾಲಿಂಗ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.