ಹೊಸಪೇಟೆ: ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಮತ್ತು ಪ್ರಚೋದನಾಕಾರಿ ಮಾತನಾಡಿರುವ ಶಾಸಕ ಜಿ. ಸೋಮಶೇಖರ ರೆಡ್ಡಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಿಪಿಎಂ ಆಗ್ರಹಿಸಿದೆ.
ಈ ಸಂಬಂಧ ಪಕ್ಷದ ಪದಾಧಿಕಾರಿಗಳು ಶನಿವಾರ ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
‘ಸೌಹಾರ್ದತೆ ಮತ್ತು ಸಾಮರಸ್ಯಕ್ಕೆ ಭಂಗ ಉಂಟು ಮಾಡುವ ರೀತಿಯಲ್ಲಿ ಸೋಮಶೇಖರ ರೆಡ್ಡಿ ಮಾತನಾಡಿದ್ದಾರೆ. ಇದು ಹದ್ದು ಮೀರಿದ ವರ್ತನೆ. ಮಾನವ ದ್ವೇಷದ ಗೂಂಡಾ ಪ್ರವೃತ್ತಿಯನ್ನು ಪಕ್ಷ ಬಲವಾಗಿ ಖಂಡಿಸುತ್ತದೆ’ ಎಂದು ತಿಳಿಸಿದ್ದಾರೆ.
‘ಜಿಲ್ಲಾಡಳಿತವು ರೆಡ್ಡಿ ವಿರುದ್ಧ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಳ್ಳಬೇಕು. ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ವಿಧಾನಸಭೆಯ ಸ್ಪೀಕರ್, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಶಾಸಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ಆರ್.ಎಸ್. ಬಸವರಾಜ, ಮುಖಂಡರಾದ ಆರ್. ಭಾಸ್ಕರ್ ರೆಡ್ಡಿ, ಮರಡಿ ಜಂಬಯ್ಯ ನಾಯಕ, ಎನ್. ಗೋಪಾಲ್, ಯಲ್ಲಾಲಿಂಗ, ಬಿಸಾಟಿ ಮಹೇಶ್, ತಾಯಪ್ಪ ನಾಯಕ, ಎಂ.ಸಿ. ವೀರಸ್ವಾಮಿ ಇದ್ದರು.