ಹೊಸಪೇಟೆ: ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ನಗರದ ತಾಲ್ಲೂಕು ಕಚೇರಿಕ ಎದುರು ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
‘ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ., ಯು.ಕೆ.ಜಿ. ಶಿಕ್ಷಣ ಒದಗಿಸುವ ಮತ್ತು ಪ್ರಾಥಮಿಕ ಹಂತದಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಪಬ್ಲಿಕ್ ಶಾಲೆಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಾತೃಭಾಷೆ ಬೆಳವಣಿಗೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಾದ ಸರ್ಕಾರ, ಅದರ ಮೇಲೆ ದಾಳಿ ನಡೆಸುತ್ತಿರುವುದು ದುರದೃಷ್ಟಕರ’ ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.
‘ಈಗಾಗಲೇ ರಾಜ್ಯದಲ್ಲಿ ಹಾದಿಗೊಂದು, ಬೀದಿಗೊಂದು ಇಂಗ್ಲಿಷ್ ಮಾಧ್ಯಮದ ಶಾಲೆಗಳು, ಕಿಂಡರ್ ಗಾರ್ಡನ್ಗಳು ಹುಟ್ಟಿಕೊಂಡಿವೆ. ಬರುವ ದಿನಗಳಲ್ಲಿ ಅವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸಲಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
‘ಈಗಿರುವ ಕನ್ನಡ ಮಾಧ್ಯಮದ ಶಾಲೆಗಳನ್ನು ಸದೃಢಗೊಳಿಸಬೇಕು. ಅಲ್ಲಿ ಇಂಗ್ಲಿಷ್ ಒಂದು ಭಾಷೆಯಾಗಿ ಕಲಿಸಬೇಕು. ಮಕ್ಕಳ ಹಾಜರಾತಿ ಹೆಚ್ಚಿಸಲು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು. ಅವುಗಳ ನಿರ್ನಾಮಕ್ಕೆ ಮುಂದಾದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.