ಹೊಸಪೇಟೆ: ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಸಿಪಿಎಂ ಹಾಗೂ ಕಾಮ್ರೇಡ್ ಜ್ಯೋತಿಬಸು ನಾಗರಿಕರ ಹೋರಾಟ ಸಮಿತಿ ಕಾರ್ಯಕರ್ತರು ಮಂಗಳವಾರ ಇಲ್ಲಿನ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ನಗರಸಭೆ ಪೌರಾಯುಕ್ತ ವಿ. ರಮೇಶ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದ 22, 24ನೇ ವಾರ್ಡಿನಲ್ಲಿ ಕುಡಿಯುವ ನೀರಿಗೆ ಬಹಳ ಸಮಸ್ಯೆ ಇದೆ. ಈ ಸಂಬಂಧ ಎರಡು ತಿಂಗಳ ಹಿಂದೆ ಮನವಿ ಕೂಡ ಸಲ್ಲಿಸಲಾಗಿತ್ತು. ಆದರೆ, ಇದುವರೆಗೆ ಸಮಸ್ಯೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಈಗಾಗಲೇ ಈ ಬಡಾವಣೆಗಳಲ್ಲಿ ಎರಡು ಕೊಳವೆಬಾವಿಗಳಿವೆ. ಅವುಗಳನ್ನು ದುರಸ್ತಿಗೊಳಿಸಿದರೆ ನೀರಿನ ಸಮಸ್ಯೆ ದೂರವಾಗಿಸಬಹುದು. ಆದರೆ, ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಜನರಿಗೆ ಬಹಳ ಸಮಸ್ಯೆಯಾಗುತ್ತಿದ್ದು, ಕೂಡಲೇ ಬಗೆಹರಿಸಲು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಮಿತಿಯ ಅಧ್ಯಕ್ಷ ಎಂ. ಗೋಪಾಲ್, ಕಾರ್ಯದರ್ಶಿ ಎ. ಶಿವಕುಮಾರ, ಕೆ. ಹುಲುಗಪ್ಪ, ನಾಗಪ್ಪ, ಖಾಜಾ ಬನ್ನಿ, ಲಕ್ಷ್ಮಮ್ಮ, ಪಾರ್ವತಮ್ಮ, ಹೊನ್ನೂರ ವಲಿ, ಕರಿಯಮ್ಮ, ಮಂಜಮ್ಮ, ಶಾಂತಮ್ಮ ಇದ್ದರು.