ಹೊಸಪೇಟೆ: ನೆರೆ ಸಂತ್ರಸ್ತರಿಗೆ ಕೂಡಲೇ ಕೇಂದ್ರ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರಮಿಕ ಭವನದಿಂದ ಪ್ರಮುಖ ಮಾರ್ಗಗಳ ಮೂಲಕ ತಾಲ್ಲೂಕು ಕಚೇರಿ ವರೆಗೆ ಘೋಷಣೆಗಳನ್ನು ಕೂಗುತ್ತ ರ್ಯಾಲಿ ನಡೆಸಿದರು. ನಂತರ ತಹಶೀಲ್ದಾರ್ ಡಿ.ಜಿ. ಹೆಗಡೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ನಿರುದ್ಯೋಗ ಭತ್ಯೆ ನೀಡಬೇಕು. ಉದ್ಯೋಗ ಸೃಷ್ಟಿಸಲು ಹೂಡಿಕೆ ಹೆಚ್ಚಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಕನಿಷ್ಠ ₹18,000 ವೇತನ ನಿಗದಿಪಡಿಸಬೇಕು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣಕ್ಕೆ ಕೈಹಾಕಬಾರದು. ಉದ್ಯೋಗ ಖಾತ್ರಿ ಯೋಜನೆಯಡಿ ನೀಡುತ್ತಿರುವ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಬೇಕು. ಕೃಷಿ ಬಿಕ್ಕಟ್ಟಿನಿಂದ ರೈತರನ್ನು ಪಾರು ಮಾಡಲು ಸಂಪೂರ್ಣ ಸಾಲ ಮನ್ನಾ ಮಾಡಬೇಕು. ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ₹3,000ಕ್ಕೆ ಏರಿಸುವುದು ಪ್ರಮುಖ ಬೇಡಿಕೆಗಳಾಗಿವೆ.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ, ಮುಖಂಡರಾದ ಯಲ್ಲಾಲಿಂಗ, ಬಿ. ಸ್ವಾಮಿ, ಕೆ. ನಾಗರತ್ನಮ್ಮ, ಶಕುಂತಲಾ, ಕೆ.ಎಂ. ಸ್ವಪ್ನಾ ಇದ್ದರು.