ಹೊಸಪೇಟೆ(ವಿಜಯನಗರ): ‘ಅಂಗನವಾಡಿ ಕಾರ್ಯಕರ್ತೆಯರು ಅರ್ಹ ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಮಹತ್ವ ಗೊತ್ತು ಪಡಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್ ತಿಳಿಸಿದರು.
ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
‘ಸೆಪ್ಟೆಂಬರ್ ತಿಂಗಳನ್ನು ಪೌಷ್ಟಿಕ ತಿಂಗಳೆಂದು ಅಂಗನವಾಡಿಯಿಂದ ಆಚರಿಸಿ ಫಲಾನುಭವಿಗಳಿಗೆ ಪೌಷ್ಟಿಕತೆಯ ಮಾಹಿತಿ ನೀಡಲಾಗುತ್ತದೆ. ಆಹಾರ ವಿತರಿಸುವುದರ ಜೊತೆಗೆ ಪೌಷ್ಟಿಕತೆಯ ಮಹತ್ವವನ್ನು ಅವರಿಗೆ ಮನದಟ್ಟು ಮಾಡಬೇಕು’ ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧೂ ಯಲಿಗಾರ ಮಾತನಾಡಿ, ‘ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಕೈತೋಟ, ಕಿಶೋರಿ ಮತ್ತು ಬಾಣಂತಿಯರಿಗೆ ಯೋಗಾಭ್ಯಾಸ, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳೆ ನಾಗಪ್ಪ, ಪೋಷಣ ಅಭಿಯಾನ ತಾಲ್ಲೂಕು ಸಂಯೋಜಕ ನೀಲಕಂಠ, ರಾಘವೇಂದ್ರ, ಎಲ್.ಡಿ.ನದಾಫ್, ಲಕ್ಷ್ಮೀದೇವಿ, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು ಇದ್ದರು.