ಹೊಸಪೇಟೆ: ರೋಹಿಣಿ ಸಿಂಧೂರಿ ಅವರ ವರ್ಗಾವಣೆ ರದ್ದುಗೊಳಿಸಿ, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಮಂಡಳಿ ಕಾರ್ಯದರ್ಶಿ ಹುದ್ದೆಯಲ್ಲೇ ಮುಂದುವರೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣಕಾರರ ಫೆಡರೇಶನ್ (ಸಿ.ಐ.ಟಿ.ಯು.) ಆಗ್ರಹಿಸಿದೆ.
ಈ ಕುರಿತು ಫೆಡರೇಶನ್ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.
‘2006ರಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯನ್ನು ರಚಿಸಿದೆ. ಸುಮಾರು 21 ಲಕ್ಷ ಕಲ್ಯಾಣ ಮಂಡಳಿಯಲ್ಲಿ ಫಲಾನುಭವಿಗಳಾಗಿ ಹೆಸರು ನೋಂದಣಿ ಮಾಡಿಸಿದ್ದಾರೆ. ₹500 ಕೋಟಿಗಿಂತ ಅಧಿಕ ಹಣ ಅವರ ಮಕ್ಕಳ ಶಿಕ್ಷಣ, ಮದುವೆ, ಪಿಂಚಣಿ, ವೈದ್ಯಕೀಯ ನೆರವು ಸೇರಿದಂತೆ ಇತರೆ ಉದ್ದೇಶಕ್ಕೆ ಮೀಸಲಿಡಲಾಗಿದೆ. ಅದನ್ನು ಆ ಉದ್ದೇಶಕ್ಕಾಗಿಯೇ ಖರ್ಚು ಮಾಡಲು ರೋಹಿಣಿ ಅವರು ಕೆಲಸ ಮಾಡುತ್ತಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
‘ಜನಪರ, ಪ್ರಾಮಾಣಿಕ ಅಧಿಕಾರಿಯನ್ನು ಅದೇ ಹುದ್ದೆಯಲ್ಲೇ ಮುಂದುವರೆಸಿದರೆ ಲಕ್ಷಾಂತರ ಕಾರ್ಮಿಕರಿಗೆ ನ್ಯಾಯ ಕೊಟ್ಟಂತಾಗುತ್ತದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಕಾರ್ಮಿಕರ ಹಿತಕ್ಕೆ ಮೊದಲ ಆದ್ಯತೆ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.
ಫೆಡರೇಶನ್ ಜಿಲ್ಲಾ ಅಧ್ಯಕ್ಷ ಎನ್. ಯಲ್ಲಾಲಿಂಗ, ಮುಖಂಡರಾದ ಜಿ. ಮಂಜು, ಕೆ. ಮಂಜುನಾಥ, ಎಂ. ರಘು, ಆರ್. ಭಾಸ್ಕರ್ ರೆಡ್ಡಿ, ಗೋಪಾಲ ಇದ್ದರು.