ವಿಜಯನಗರ (ಹೊಸಪೇಟೆ): ತರಬೇತಿ ಪಡೆಯದ ವಿದ್ಯಾರ್ಥಿಗಳಿಗೆ ಐಟಿಐ ಪರೀಕ್ಷೆ ನಿಗದಿಪಡಿಸಿರುವುದು ಸರಿಯಲ್ಲ. ಕೂಡಲೇ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮೊಕ್ರಟಿಕ್ ಯುತ್ ಆರ್ಗನೈಜೇಶನ್ (ಎಐಡಿವೈಒ) ಕಾರ್ಯಕರ್ತರು ಮಂಗಳವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ತಹಶೀಲ್ದಾರ್ ಎಚ್. ವಿಶ್ವನಾಥ್ ಮೂಲಕ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.
ಕೋವಿಡ್ ಲಾಕ್ಡೌನ್ನಿಂದ ಐಟಿಐ ವಿದ್ಯಾರ್ಥಿಗಳಿಗೆ ಹತ್ತು ತಿಂಗಳಿಂದ ತರಬೇತಿ ಆಗಿಲ್ಲ. ಮೊದಲ ವರ್ಷದ ಪರೀಕ್ಷೆಯಿಂದ ವಿನಾಯಿತಿ ನೀಡಿ ನವದೆಹಲಿಯ ಡಿಜಿಟಿ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಪರೀಕ್ಷಾ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶವೂ ನೀಡಿಲ್ಲ. ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಕೂಡಲೇ ಪರೀಕ್ಷೆ ರದ್ದುಪಡಿಸಿ, ಗೊಂದಲ ದೂರ ಮಾಡಬೇಕು ಎಂದು ಒತ್ತಾಯಿಸಿದರು.