ವಿಜಯನಗರ (ಹೊಸಪೇಟೆ): ಕಾರ್ಮಿಕರ ಪರವಾದ ಕಾನೂನು ಜಾರಿಗೆ ತರುವಂತೆ ಆಗ್ರಹಿಸಿ ಬಜೆಟ್ ಅಧಿವೇಶನದಲ್ಲಿ ಸಚಿವರು ಧ್ವನಿ ಎತ್ತಬೇಕೆಂದು ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಶ್ರಮಿಕ ಭವನದಿಂದ ಕಚೇರಿ ವರೆಗೆ ರ್ಯಾಲಿ ನಡೆಸಿದರು. ನಂತರ ಆನಂದ್ ಸಿಂಗ್ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಅವರ ಆಪ್ತ ಸಂದೀಪ್ ಸಿಂಗ್ ಅವರಿಗೆ ಸಲ್ಲಿಸಿದರು.
ಸಚಿವರು ಬಜೆಟ್ ಅಧಿವೇಶನದಲ್ಲಿ ಕಾರ್ಮಿಕರ ಪರವಾಗಿ ಧ್ವನಿ ಎತ್ತಬೇಕು. ಕಾರ್ಮಿಕರಿಗೆ ಅನುಕೂಲವಾಗುವಂತಹ ಕಾನೂನು ಜಾರಿಗೆ ತರಲು ಒತ್ತಾಯಿಸಬೇಕು. ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಕಾರ್ಮಿಕ ಕಾನೂನು ರದ್ದುಪಡಿಸಲು ಆಗ್ರಹಿಬೇಕು ಎಂದು ಒತ್ತಾಯಿಸಿದರು.
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ವಿದ್ಯುತ್ ಇಲಾಖೆಯ ಖಾಸಗೀಕರಣ ಕೈಬಿಡಬೇಕು. ಎಲ್ಲ ಕಾರ್ಮಿಕರಿಗೂ ಮಾಸಿಕ ಕನಿಷ್ಠ ₹24,000 ವೇತನ ನೀಡಬೇಕು. ಅಗತ್ಯ ವಸ್ತುಗಳು, ತೈಲ ದರ, ಸಿಲಿಂಡರ್ ದರ ಕೂಡಲೇ ಇಳಿಸಿ, ಜನಸಾಮಾನ್ಯರ ಮೇಲಿನ ಹೊರೆ ತಗ್ಗಿಸಬೇಕು ಎಂದು ಆಗ್ರಹಿಸಿದರು.
ಫೆಡರೇಶನ್ ಆಫ್ ಆಟೊ ರಿಕ್ಷಾ ಡ್ರೈವರ್ಸ್ ಯೂನಿಯನ್, ಅಂಗನವಾಡಿ ಕಾರ್ಯಕರ್ತೆಯರು, ಅಸಂಘಟಿತ ಕಾರ್ಮಿಕರು ಇದ್ದರು.