ಹೊಸಪೇಟೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿ ದೇವರಗುಡಿ ಚಂದ್ರಶೇಖರಪ್ಪನ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಆಗ್ರಹಿಸಿದೆ.
ಫೆಡರೇಶನ್ ಪದಾಧಿಕಾರಿಗಳು ಮಂಗಳವಾರ ಉಪವಿಭಾಗಾಧಿಕಾರಿ ಪಿ.ಎನ್. ಲೋಕೇಶ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
‘ಆರೋಪಿಯ ಆಸ್ತಿ ಮುಟ್ಟುಗೋಲು ಹಾಕಿಕೊಂಡು, ಅದರಿಂದ ಸಂತ್ರಸ್ತ ಬಾಲಕಿಗೆ ಪುನರ್ವಸತಿ ಕಲ್ಪಿಸಬೇಕು. ಅವರ ಕುಟುಂಬಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.