ಹೊಸಪೇಟೆ: ಮೋಟಾರ್ ವಾಹನ ಕಾಯ್ದೆಗೆ ತಿದ್ದುಪಡಿ ತಂದಿರುವುದಕ್ಕೆ ತಾಲ್ಲೂಕು ವಕೀಲರ ಸಂಘ ಕಟುವಾಗಿ ಟೀಕಿಸಿದೆ.
ಈ ಕುರಿತು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ‘ಇದು ಜನಸಾಮಾನ್ಯರ ಹಿತಾಸಕ್ತಿಗೆ ವಿರುದ್ಧವಾದ ನಿರ್ಧಾರವಾಗಿದ್ದು, ಕೂಡಲೇ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.
‘ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ದಂಡ ಅಧಿಕವಾಗಿದೆ. ಇದರಿಂದಾಗಿ ಸಾರ್ವಜನಿಕರು, ಕಕ್ಷಿದಾರರು ಮತ್ತು ವಕೀಲರಿಗೂ ಬಹಳ ತೊಂದರೆ ಆಗುತ್ತಿದೆ. ಹಾಗಾಗಿ ಕೂಡಲೇ ಇದನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.
ಸಂಘದ ಅಧ್ಯಕ್ಷ ಟಿ. ಹನುಮಂತಪ್ಪ, ವಕೀಲರಾದ ತಾರಿಹಳ್ಳಿ ವೆಂಕಟೇಶ್, ಕಲ್ಲಂಭಟ್ ಇದ್ದರು.