ಹೊಸಪೇಟೆ: ‘ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಫೆ. 26ರಂದು ರಾಜ್ಯದಾದ್ಯಂತ ಏಕಕಾಲಕ್ಕೆ ‘ಕಮಲ ಜ್ಯೋತಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮೋರ್ಚಾದ ರಾಜ್ಯ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ತಿಳಿಸಿದರು.
ಬುಧವಾರ ಸಂಜೆ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸಿಕೊಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶ’ ಎಂದು ವಿವರಿಸಿದರು.
‘ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷ ತಯಾರಿ ಮಾಡಿಕೊಳ್ಳುತ್ತಿದೆ. ಶೀಘ್ರದಲ್ಲೇ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದ್ದು, ಅಭ್ಯರ್ಥಿ ಗೆಲುವಿಗೆ ಹಗಲಿರುಳು ಶ್ರಮಿಸಲಾಗುವುದು’ ಎಂದುಪಕ್ಷದ ತಾಲ್ಲೂಕು ಅಧ್ಯಕ್ಷ ಅನಂತ ಪದ್ಮನಾಭ ತಿಳಿಸಿದರು.
ಪಕ್ಷದ ಎಸ್ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುದ್ಲಿ ಪರಶುರಾಮ, ಮುಖಂಡರಾದ ಕಿಶೋರ್ ಪತ್ತಿಕೊಂಡ, ಶಂಕರ್ ಮೇಟಿ, ಬಸವರಾಜ ನಾಲತ್ವಾಡ, ದೇವರಮನೆ ಶ್ರೀನಿವಾಸ, ಜಂಬಾನಹಳ್ಳಿ ವಸಂತ, ಮಧಸೂದನ್, ಕಟಗಿ ರಾಮಕೃಷ್ಣ, ದೇವರಾಜ ಅನವಾಳ ಇದ್ದರು.