ಹರಪನಹಳ್ಳಿ: ಕೋವಿಡ್-19ಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಹೋಂ ಕ್ವಾರಂಟೈನ್ನಲ್ಲಿ ಇದ್ದ ಹೆಡ್ ಕಾನ್ಸ್ಟೆಬಲ್(45) ಒಬ್ಬರು ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದ ಇವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಅರಸಿಕೇರೆ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಜೂನ್ 18ರಂದು ಠಾಣೆಯ ಸಿಬ್ಬಂದಿ ಜೊತೆಗೆ ತೆರಳಿ ಬಳ್ಳಾರಿ ಜಿಂದಾಲ್ ಬೈಪಾಸ್ನಲ್ಲಿ ಕರ್ತವ್ಯ ನಿರ್ವಹಿಸಿ. ಜೂನ್ 24ರಂದು ಅಲ್ಲಿನ ಕರ್ತವ್ಯದಿಂದ ಬಿಡುಗಡೆ ಹೊಂದಿ ಬಸ್ ಮೂಲಕ ಹರಪನಹಳ್ಳಿಗೆ ಬಂದಿದ್ದರು.
ಆ ವೇಳೆ ಅವರ ಗಂಟಲಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆಗ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಈ ವೇಳೆ ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಬಳ್ಳಾರಿಯ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರಿಂದ ಜುಲೈ 10ರಂದು ಬಿಡುಗಡೆ ಹೊಂದಿ, ವೈದ್ಯರ ಸಲಹೆ ಮೇರೆಗೆ ಸ್ವಗ್ರಾಮದಲ್ಲಿ ಕ್ವಾರಂಟೈನ್ ಆಗಿದ್ದರು.
ಜು.21ರಂದು ಪುನಃ ಮೈಕೈ ನೋವು, ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜು.23ರಂದು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮರಣೋತ್ತರ ಕೋವಿಡ್ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರಿಸುವ ಬಗ್ಗೆ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ. ಮೃತರಿಗೆ ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಇದ್ದಾರೆ.