ಬಳ್ಳಾರಿ: ‘ರಾಜ್ಯದಲ್ಲಿ ಏಮ್ಸ್ ಮಾದರಿ ಆಸ್ಪತ್ರೆಯನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಯೋಜನೆಗೆ ಹಣಕಾಸು ಇಲಾಖೆ ಅನುಮತಿಯು ಶೀಘ್ರ ದೊರೆಯಲಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದರು.
ಪ್ರಧಾನ ಮಂತ್ರಿ ಸ್ವಾಸ್ಥ್ಯಸುರಕ್ಷಾ ಯೋಜನೆ ಅಡಿ ನಗರದಲ್ಲಿ ₹150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಟ್ರಾಮಾ ಕೇರ್ ಸೆಂಟರ್ ಅನ್ನು ಸೋಮವಾರ ಆನ್ ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶಕ್ಕೆ ಸ್ವಾತಂತ್ರ್ಯ ದೊರಕಿ ದಶಕಗಳು ಕಳೆದರೂ ಏಮ್ಸ್ ಮಾದರಿ ಆಸ್ಪತ್ರೆ ಒಂದೇ ಇತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದಲ್ಲಿ 22 ಏಮ್ಸ್ ಆಸ್ಪತ್ರೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈಗಾಗಲೇ 7 ಆಸ್ಪತ್ರೆಗಳನ್ನು ದೇಶದ ವಿವಿಧೆಡೆ ಆರಂಭಿಸಲಾಗಿದೆ’ ಎಂದರು.
‘ನಾಲ್ಕು ವರ್ಷದಲ್ಲಿ ದೇಶದಲ್ಲಿ 57 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸುವ ಮೂಲಕ ಆಸ್ಪತ್ರೆಗಳಲ್ಲಿ ವೈದ್ಯರ ಸಮಸ್ಯೆ ನೀಗಿಸುವ ಪ್ರಯತ್ನ ನಡೆದಿದೆ. ಪ್ರಸಕ್ತ ವರ್ಷ ಚಿಕ್ಕಬಳ್ಳಾಪುರ, ಯಾದಗಿರಿ, ಚಿಕ್ಕಮಗಳೂರು ಸೇರಿದಂತೆ ನಾಲ್ಕು ಕಡೆ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗುವುದು’ ಎಂದರು.
‘ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸುಷ್ಮಾ ಸ್ವರಾಜ್ ಅವರು ಸಚಿವರಾಗಿದ್ದ ಅವಧಿಯಲ್ಲೇ ಬಳ್ಳಾರಿಯಲ್ಲಿ ಟ್ರಾಮಾಕೇರ್ ಸೆಂಟರ್ ಆರಂಭಕ್ಕೆ ಮಂಜೂರಾತಿ ನೀಡಿದ್ದರು’ ಎಂದು ಸ್ಮರಿಸಿದರು.