ಹೊಸಪೇಟೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸಜೀವ ಬಾಂಬ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಮಂಗಳವಾರ ಭದ್ರತೆ ಹೆಚ್ಚಿಸಲಾಗಿದೆ.
ಗಣ್ಯರು, ಸಾರ್ವಜನಿಕರ ವಾಹನಗಳನ್ನು ಜಲಾಶಯದ ಮೇಲ್ಭಾಗಕ್ಕೆ ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸುತ್ತಿಲ್ಲ. ಎಲ್ಲಾ ರೀತಿಯ ವಾಹನಗಳನ್ನು ಕೆಳಭಾಗದಲ್ಲಿಯೇ ತಡೆದು ನಿಲ್ಲಿಸಲಾಗುತ್ತಿದೆ. ವೈಕುಂಠ ಬೆಟ್ಟಕ್ಕೆ ಹೋಗಬೇಕಾದವರು ಅಣೆಕಟ್ಟೆಗೆ ಸೇರಿದ ಮ್ಯಾಕ್ಸಿಕ್ಯಾಬ್ ವಾಹನದಲ್ಲಿ ಹೋಗಬೇಕು. ಇಲ್ಲವಾದಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೋಡಬಹುದು.
ನಗರದ ರೈಲು ನಿಲ್ದಾಣ, ಬಸ್ ನಿಲ್ದಾಣದಲ್ಲೂ ಭದ್ರತೆ ಕಲ್ಪಿಸಲಾಗಿದ್ದು, ಮಂಗಳವಾರ ಶ್ವಾನ ದಳದಿಂದ ಪರಿಶೀಲನೆ ನಡೆಸಲಾಯಿತು.
‘ತುಂಗಭದ್ರಾ ಜಲಾಶಯ ವೀಕ್ಷಣೆಗೆ ಯಾರಿಗೂ ಅಡ್ಡಿಪಡಿಸಿಲ್ಲ. ಸುರಕ್ಷತೆಯ ದೃಷ್ಟಿಯಿಂದ ಯಾವ ವಾಹನಗಳಿಗೂ ಮೇಲೆ ಹೋಗಲು ಬಿಡುತ್ತಿಲ್ಲ. ಅಣೆಕಟ್ಟೆಗೆ ಬರುವವರ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ. ಮೊದಲಿಗಿಂತ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಡಿ.ವೈ.ಎಸ್ಪಿ. ವಿ. ರಘುಕುಮಾರ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.