ಬಳ್ಳಾರಿ: 'ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವ ಹಾಲಿ ಕೋಶಾಧ್ಯಕ್ಷ ಟಿ.ಎಂ. ಪಂಪಾಪತಿಯವರನ್ನು ಬೆಂಬಲಿಸುವೆ' ಎಂದು ಹಾಲಿ ಅಧ್ಯಕ್ಷ ಸಿದ್ದರಾಮ ಕಲ್ಮಠ ತಿಳಿಸಿದರು.
'ಐದು ವರ್ಷಗಳ ಕಾಲ ಪರಿಷತ್ತಿನ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಪಂಪಾಪತಿಯವರು ಪರಿಷತ್ತನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿರೀಕ್ಷೆ ಇದೆ' ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.
'ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಂಘಟನಾ ಕಾರ್ಯದರ್ಶಿ ಯಾಗಿಯೂ ಕಾರ್ಯನಿರ್ವಹಿಸಿರುವ ಪಂಪಾಪತಿ ಡಾ.ವಿಷ್ಣು ಸೇನಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಪ್ರಕಾಶಕರಾಗಿ, ಹೋರಾಟಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ' ಎಂದು ಹೇಳಿದರು.
'ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತನ್ನು ಬಳ್ಳಾರಿಯಲ್ಲಿ ಆಯೋಜಿಸುವುದು,ಮಹಿಳಾ ಸಮ್ಮೇಳನಗಳನ್ನು, ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಸೇರಿದಂತೆ ಹಲವು ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು' ಎಂದು ಅಭ್ಯರ್ಥಿ ಪಂಪಾಪತಿ ತಿಳಿಸಿದರು.