ಹೊಸಪೇಟೆ: ಮಂಗಳವಾರ ಸಂಜೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಅಲ್ಲಿನ ಅಸ್ವಚ್ಛತೆ ನೋಡಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು.
ಸೂಕ್ತ ನಿರ್ವಹಣೆ ಇಲ್ಲದೆ ಆಸ್ಪತ್ರೆಯ ಹಿಂಬದಿಯಲ್ಲಿ ನಿಂತಿದ್ದ ಐದು ಆಂಬುಲೆನ್ಸ್ ಚಾಲಕರನ್ನು ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರೊಂದಿಗೆ ಸಭೆ ನಡೆಸಿದ ಅವರು, ಬಳಿಕ ಆಸ್ಪತ್ರೆಯ ವೀಕ್ಷಣೆ ಮಾಡಿದರು. ಆಸ್ಪತ್ರೆಯ ಇಡೀ ಪರಿಸರದಲ್ಲಿ ಓಡಾಡಿ ಪರಿಶೀಲನೆ ನಡೆಸಿದರು.
‘ಇಡೀ ಆಸ್ಪತ್ರೆಯ ಪರಿಸರದಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ಕೊಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆಂಬುಲೆನ್ಸ್ಗಳ ಸೂಕ್ತ ನಿರ್ವಹಣೆ ಮಾಡಬೇಕು. ಆಸ್ಪತ್ರೆ ಆವರಣದಲ್ಲಿನ ನೀರಿನ ತೊಟ್ಟಿ ತೆರವುಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜನಾರ್ದನ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್, ಡಾ. ಹರಪ್ರಸಾದ್ ಇದ್ದರು.
ಗುಣಮಟ್ಟಕ್ಕೆ ಒತ್ತು ಕೊಡಿ:ಇಲ್ಲಿನ ನಗರಾಭಿವೃದ್ಧಿ ಕಚೇರಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕುರಿತು ಸಭೆ ನಡೆಸಿದ ಅವರು, ‘ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ಕೊಡಬೇಕು. ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಬೇಕು’ ಎಂದು ಸೂಚನೆ ಕೊಟ್ಟರು.
ನಂತರ ನಗರದ ರೈಲು ನಿಲ್ದಾಣ, ಅಲ್ಲಿನ ಮೇಲ್ಸೇತುವೆ, ಸುತ್ತಮುತ್ತಲಿನ ಪರಿಸರದಲ್ಲಿ ಓಡಾಡಿ ಪರಿಶೀಲನೆ ನಡೆಸಿದರು.