ಬಳ್ಳಾರಿ: ‘ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ದಿನ ಮತದಾನದ ಅವಧಿ ಮುಗಿಯುವ ಕೊನೆಯ ಒಂದು ಗಂಟೆ ಕಾಲ ಕೊರೊನಾ ಸೋಂಕಿತರಿಗೆ ಮತದಾನದ ಅವಕಾಶ ನೀಡಿರುವುದರಿಂದ ಮತದಾನ ಸಿಬ್ಬಂದಿ ಆ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು’ ಎಂದು ತರಬೇತುದಾರ ಪನಮೇಶುಲು ಹೇಳಿದರು.
ಸೋಂಕಿತರಿಗೆ ಮತದಾನದ ಅವಕಾಶ ನೀಡುವ ಕುರಿತು ಚುನಾವಣೆ ಸಿಬ್ಬಂದಿಗೆ ನಗರದಲ್ಲಿ ಬುಧವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ’ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಪಿಪಿಇ ಕಿಟ್ ಧರಿಸುವುದು ಕಡ್ಡಾಯ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು’ ಎಂದು ಸಲಹೆ ನೀಡಿದರು.
ಪಿಪಿಇ ಕಿಟ್ ಧರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವೈದ್ಯಕೀಯ ಸಿಬ್ಬಂದಿ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ ಮಾರ್ಗಸೂಚಿಗಳ ಬಗ್ಗೆ ವಿವರ ನೀಡಿದರು. ತಹಸೀಲ್ದಾರ್ ಯು.ನಾಗರಾಜ ಇದ್ದರು.
ಜಿಲ್ಲೆಯಲ್ಲಿ ಒಟ್ಟು 28 ಮತಕೇಂದ್ರಗಳಲ್ಲಿದ್ದು 6,753 ಮತದಾರರರಿದ್ದಾರೆ. ಅ.28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.