ಹೊಸಪೇಟೆ: ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮಸೂದೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಭಾರತೀಯ ವೈದ್ಯ ಸಂಘ ತಾಲ್ಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈ ಸಂಬಂಧ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.
‘ವೈದ್ಯಕೀಯ ಪರಿಷತ್ತು ತಿದ್ದುಪಡಿ ಮಸೂದೆ, ರಾಷ್ಟ್ರೀಯ ಗ್ರಾಹಕರ ಮಸೂದೆಗಳು ಕಾಯ್ದೆಯ ಸ್ವರೂಪ ಪಡೆದುಕೊಂಡರೆ ಇಡೀ ದೇಶದ ಆರೋಗ್ಯ ವ್ಯವಸ್ಥೆ ಹದಗೆಡುತ್ತದೆ. ಇದರಿಂದ ಸಾರ್ವಜನಿಕರು ಹಾಗೂ ವೈದ್ಯರಿಗೆ ಸಮಸ್ಯೆ ಎದುರಾಗಲಿದೆ’ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಜಿ.ಎಂ. ಸೋಮಶೇಖರ್ ಆತಂಕ ವ್ಯಕ್ತಪಡಿಸಿದ್ದಾರೆ.
‘ಪ್ರಜಾಪ್ರಭುತ್ವ, ಜನವಿರೋಧಿಯಾಗಿರುವ ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಬಾರದು. ಒಂದುವೇಳೆ ಸರ್ಕಾರ ಹಠಮಾರಿ ಧೋರಣೆ ಅನುಸರಿಸಿದರೆ ದೇಶದಾದ್ಯಂತ ವೈದ್ಯರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ವೈದ್ಯರಾದ ಹೇಮಂತ, ನಾರಾಯಣಸ್ವಾಮಿ, ಪ್ರಶಾಂತ, ರಾಘವೇಂದ್ರ, ಸಿದ್ದರಾಮ ಇದ್ದರು.