ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆಯಲು ಸಿಪಿಐಎಂ ಆಗ್ರಹ

Last Updated 15 ಏಪ್ರಿಲ್ 2021, 6:03 IST
ಅಕ್ಷರ ಗಾತ್ರ

ಬಳ್ಳಾರಿ: 'ರಾಜ್ಯದಲ್ಲಿ ಕೂಡಲೇ ಕೋವಿಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿ, ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು ಹಾಗೂ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆಯಬೇಕು' ಎಂದು ಸಿಪಿಐಎಂರಾಜ್ಯ ಸಮಿತಿ ಕಾರ್ಯದರ್ಶಿ ಯು.ಬಸವರಾಜ್ ಆಗ್ರಹಿಸಿದರು.

'ಕೋವಿಡ್ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸರ್ವ ಪಕ್ಷಗಳ ಸಭೆಯನ್ನು ಏ.18 ರಂದು ಏರ್ಪಡಿಸಿದ್ದಾರೆ. ಆದರೆ ಸಿಪಿಐಎಂಗೆ ಆಹ್ವಾನ ಇಲ್ಲದಿರುವುದರಿಂದ ಅವರಿಗೆ ಬಹಿರಂಗ ಪತ್ರ ಬರೆದು ಕೋವಿಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೆಂದು ಆಗ್ರಹಿಸುತ್ತಿದ್ದೇವೆ' ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ಹಾಸಿಗೆ ಸೌಕರ್ಯ ಇಲ್ಲದೆ ನೂರಾರು ಸೋಂಕಿತರು ಆಸ್ಪತ್ರೆಯ ಹೊರಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ' ಎಂದು ಹೇಳಿದರು.

'ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಸಿದ್ಧತೆ ಮತ್ತು ಮುಂಜಾಗ್ರತೆ ವಹಿಸಿಲ್ಲ. ಹೀಗಾಗಿಯೇ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ಹೆಸರಲ್ಲಿ‌ ಜನರನ್ನು ಸುಲಿಗೆ ಮಾಡುತ್ತಿವೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

'ಕೋವಿಡ್ ಮೊದಲ ಲಸಿಕೆ ಪಡೆದವರು ಎರಡನೇ ಲಸಿಕೆ ಪಡೆಯಲು ಕೊರತೆಯ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು. ಎಲ್ಲಾ ಆಸ್ಪತ್ರೆಗಳ ಅರ್ಧದಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಬೇಕು' ಎಂದು ಒತ್ತಾಯಿಸಿದರು‌.

'ಮುಂದಿನ ಆರು ತಿಂಗಳವರೆಗೆ ಕೋವಿಡ್ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು.ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲ ಕುಟುಂಬಗಳಿಗೂ ಮಾಸಿಕ ₹ 10 ಸಾವಿರ ನೆರವು ನೀಡಬೇಕು. ತಲಾ 10 ಕೆಜಿ ಧಾನ್ಯ ನೀಡಬೇಕು' ಎಂದು ಆಗ್ರಹಿಸಿದರು.

'ಅಗತ್ಯ ಸೇವೆಗಳನ್ನು ಹೊರತುಪಡಿಸಿ‌ ಉಳಿದ ಎಲ್ಲ‌ ಉತ್ಪಾದಕ ಘಟಕಗಳನ್ನು ಸ್ಥಗಿತಗೊಳಿಸಿ ಕಾರ್ಮಿಕ ರಿಗೆ ವೇತನ ಸಹಿತ ರಜೆ ಘೋಷಿಸಬೇಕು. ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ‌ ಸರ್ಕಾರವೇ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು.

'ಕೋವಿಡ್ ಸುರಕ್ಷತೆ ಕ್ರಮಗಳೊಂದಿಗೆ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಬೇಕು. ವೃದ್ಧರು,‌ಒಂಟಿಯಾಗಿ ವಾಸಿಸುವವರನ್ನು ಗುರುತಿಸಿ ನೇರವಾಗಿ ಊಟದ ಪೊಟ್ಟಣಗಳನ್ನು ಪೂರೈಸಬೇಕು' ಎಂದು ಒತ್ತಾಯಿಸಿದರು. ನಗರ ಸಮಿತಿ ಕಾರ್ಯದರ್ಶಿಸಿಪಿಐಎಂ ಜಿಲ್ಲಾ ಕಾರ್ಯ ದರ್ಶಿ ಜೆ.ಸತ್ಯಬಾಬು, ನಗರ ಕಾರ್ಯ ದರ್ಶಿ ಚಂದ್ರಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT