ಹೊಸಪೇಟೆ: ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಿರುವ ಸರ್ಕಾರದ ಕ್ರಮ ಖಂಡನಾರ್ಹ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿ.ಐ.ಟಿ.ಯು.) ಮುಖಂಡ ಕೆ.ಎಂ. ಸಂತೋಷ್ ಕುಮಾರ್ ತಿಳಿಸಿದ್ದಾರೆ.
‘ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕೈಗೊಳ್ಳಲು ಕಾರ್ಯಕರ್ತೆಯರು ನಿರ್ಧರಿಸಿದ್ದರು. ಆದರೆ, ಸರ್ಕಾರ ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಅದನ್ನು ಹತ್ತಿಕ್ಕಿದೆ. ಇದು ಹೋರಾಟದ ಹಕ್ಕನ್ನು ತಡೆಯುವ ಕೃತ್ಯವಾಗಿದೆ’ ಎಂದು ಬುಧವಾರ ಹೊರಡಿಸಿರುವ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
‘ಎಲ್.ಕೆ.ಜಿ., ಯು.ಕೆ.ಜಿ. ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದೆ. ಇದರಿಂದ ಅಂಗನವಾಡಿಗಳು ಬಲಗೊಳ್ಳುತ್ತವೆ. ಈ ಕುರಿತು ಹಿಂದಿನ ಸರ್ಕಾರ, ಹಾಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅನಿವಾರ್ಯವಾಗಿ ಹೋರಾಟ ನಡೆಸಬೇಕಾಗಿದೆ. ಅದಕ್ಕೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ. ಅದನ್ನು ನೋಡಿ ಸರ್ಕಾರ ಹೋರಾಟವನ್ನು ಹತ್ತಿಕ್ಕಿದೆ’ ಎಂದು ದೂರಿದ್ದಾರೆ.
‘ಕಾರ್ಯಕರ್ತೆಯರ ಹೋರಾಟವನ್ನು ಬೆಂಬಲಿಸಿ ಸಂಘಟನೆಯ ಕಾರ್ಯಕರ್ತರು ಕೂಡ ಪಾಲ್ಗೊಳ್ಳುವರು. ಹೋರಾಟಗಾರರು ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು’ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.