ಹೊಸಪೇಟೆ: ‘ಮಾಹಿತಿ ಹಕ್ಕು ಕಾಯ್ದೆಯು ಆಡಳಿತದ ಪ್ರತಿಯೊಂದು ಚಟುವಟಿಕೆಗಳನ್ನು ತಿಳಿದುಕೊಳ್ಳಲು ಸರ್ಕಾರ ಕೊಟ್ಟಿರುವ ಅಸ್ತ್ರ. ಅದರ ಬಗ್ಗೆ ಅಧಿಕಾರಿಗಳು ತಿಳಿದುಕೊಂಡು ಸಾರ್ವಜನಿಕರಿಗೆ ಸತ್ಯವಾದ ಮಾಹಿತಿ ಕೊಡಬೇಕು. ಮಾಹಿತಿ ಕೊಡದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಠಾಣೆಗೆ ದೂರು ಸಲ್ಲಿಸಲು ಅವಕಾಶವಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಎ.ಎಂ.ಪಿ. ವಾಗೀಶ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಶುಕ್ರವಾರ ನಗರದಲ್ಲಿ ಹಮ್ಮಿಕೊಂಡಿದ್ದ ’ಮಾಹಿತಿ ಹಕ್ಕು ಅಧಿನಿಯಮ ಸವಾಲು ಮತ್ತು ಪರಿಹಾರ’ ಕುರಿತು ಮಾತನಾಡಿದರು.
‘ಕಾಶ್ಮೀರ ಹೊರತುಪಡಿಸಿ ದೇಶದ ಎಲ್ಲ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಸಾರ್ವಜನಿಕರು ಏನೇ ಮಾಹಿತಿ ಕೇಳಿದರೂ ಅಧಿಕಾರಿಗಳು ಕೊಡಬೇಕು. ಅದು ಕೂಡ ಮೂವತ್ತು ದಿನಗಳ ಒಳಗೆ. ಇಲ್ಲವಾದಲ್ಲಿ ಕಾನೂನು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.
‘ಅನೇಕ ಜನ ಅಧಿಕಾರಿಗಳಿಗೆ ಕಾಯ್ದೆ ಬಗ್ಗೆ ತಿಳಿವಳಿಕೆ ಇಲ್ಲ. ಹೀಗಾಗಿಯೇ ಅನೇಕ ಸಲ ಅಧಿಕಾರಿಗಳು, ಸಾರ್ವಜನಿಕರ ನಡುವೆ ಜಟಾಪಟಿ ಉಂಟಾಗುತ್ತದೆ. ಸಾರ್ವಜನಿಕ ಸೇವೆಯಲ್ಲಿ ಇರುವವರು ಕಡ್ಡಾಯವಾಗಿ ಅದರ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ’ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಶ್ರೀಧರನ್,ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ.ಜೋಷಿ, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಜಿ. ಗೋಣಿಬಸಪ್ಪ ಇದ್ದರು.