ಹೊಸಪೇಟೆ (ವಿಜಯನಗರ): ಮುಂಗಾರು ಬಿತ್ತನೆ ಕಾರ್ಯ ಚುರುಕುಗೊಳ್ಳುವುದಕ್ಕೂ ಮುನ್ನ ಅಗತ್ಯ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಂಗಳವಾರ ನಗರದ ತಾಲ್ಲೂಕು ಕಚೇರಿ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ಗೆ ಸಲ್ಲಿಸಿದರು. ‘ಜಿಲ್ಲೆಯ ವಿವಿಧೆಡೆ ಮಳೆ ಬೀಳುತ್ತಿದೆ. ಮುಂಗಾರು ಚಟುವಟಿಕೆಗಳು ಇಷ್ಟರಲ್ಲೇ ಚುರುಕುಗೊಳ್ಳುತ್ತವೆ. ಸಕಾಲಕ್ಕೆ ಬೀಜ, ರಸಗೊಬ್ಬರ ಪೂರೈಸಬೇಕು’ ಎಂದು ಆಗ್ರಹಿಸಿದರು.
‘ಅರಣ್ಯ ಮತ್ತು ಸರ್ಕಾರಿ ಜಮೀನುಗಳಲ್ಲಿ ನೂರಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಾ ವಿತರಿಸಬೇಕು. ಐ.ಎಸ್.ಆರ್. ಸಕ್ಕರೆ ಕಾರ್ಖಾನೆ ಸರ್ಕಾರ ಸ್ವಾಧೀನಕ್ಕೆ ತೆಗೆದುಕೊಂಡು ಆರಂಭಿಸಬೇಕು. ಅಕಾಲಿಕ ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ಕೊಡಬೇಕು. ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಜಿಂದಾಲ್ಗೆ ಜಮೀನು ಮಾರಾಟ ಮಾಡಿರುವುದು ಖಂಡನಾರ್ಹ. ಕೂಡಲೇ ಅದನ್ನು ತಡೆ ಹಿಡಿಯಬೇಕು’ ಎಂದು ಒತ್ತಾಯಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿಎನ್.ಯಲ್ಲಾಲಿಂಗ, ತಾಲ್ಲೂಕು ಅಧ್ಯಕ್ಷ ಜಿ. ಕೆರೆಹನುಮಂತ, ಮುಖಂಡರಾದ ರಾಜಾಪುರ ಕಣಿಮೆಪ್ಪ, ಎ. ಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.