ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಶುಲ್ಕ ವಸೂಲಿ ಮಾಡಿದರೆ ಕ್ರಮ

ಶಿಕ್ಷಣ ಸಂಸ್ಥೆಗಳಿಗೆ ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಎಚ್ಚರಿಕೆ
Last Updated 2 ಮೇ 2019, 13:42 IST
ಅಕ್ಷರ ಗಾತ್ರ

ಹೊಸಪೇಟೆ: ‘ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಅಧಿಕ ಶುಲ್ಕ ವಸೂಲಿ ಮಾಡಿದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು’ ಎಂದು ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಎಚ್ಚರಿಕೆ ನೀಡಿದರು.

ಡೊನೇಷನ್‌ ಹಾವಳಿಗೆ ಸಂಬಂಧಿಸಿದಂತೆ ಗುರುವಾರ ನಗರದಲ್ಲಿ ನಡೆದ ಖಾಸಗಿ, ಅನುದಾನಿತ ಶಾಲೆಯ ಅಧ್ಯಕ್ಷರು, ಮುಖ್ಯಶಿಕ್ಷಕರು ಹಾಗೂ ಶಿಕ್ಷಣ ಪ್ರೇಮಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

‘ಎಲ್ಲ ಶಿಕ್ಷಣ ಸಂಸ್ಥೆಗಳುನಿಯಮಾನುಸಾರ ಶುಲ್ಕ ಪಡೆಯಬೇಕು. ಎಲ್ಲ ಶಾಲೆಗಳ ನೋಟಿಸ್‌ ಬೋರ್ಡ್‌ನಲ್ಲಿ ಶುಲ್ಕ ಪ್ರದರ್ಶಿಸಬೇಕು. ಒಂದುವೇಳೆ ನಿಗದಿತ ಶುಲ್ಕಕ್ಕಿಂತ ಹೆಚ್ಚಿಗೆ ತೆಗೆದುಕೊಂಡರೆ ಅವುಗಳ ಮಾನ್ಯತೆ ರದ್ದುಪಡಿಸಲಾಗುವುದು. ಪರಿಶೀಲನೆಗೆ ತಂಡ ಕೂಡ ರಚಿಸಲಾಗುವುದು’ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿ.ವೈ.ಎಫ್‌.ಐ.) ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್‌, ‘ಪ್ಲೇ ಕ್ಲಾಸ್‌, ಎಲ್‌.ಕೆ.ಜಿ., ಯು.ಕೆ.ಜಿ. ಮತ್ತು ಒಂದನೇ ತರಗತಿಯ ಮಕ್ಕಳಿಗೆ ಶಾಲೆಗೆ ಸೇರಿಸಿಕೊಳ್ಳಲು ಶಿಕ್ಷಣ ಸಂಸ್ಥೆಗಳು ಪೋಷಕರಿಂದ ₹5ರಿಂದ ₹35 ಸಾವಿರದ ವರೆಗೆ ಡೊನೇಷನ್‌ ಪಡೆಯುತ್ತಿವೆ. ಕೆಲವು ಶಿಕ್ಷಣ ಸಂಸ್ಥೆಗಳಂತೂ ಅದರ ರಸೀದಿ ಸಹ ಕೊಡುತ್ತಿಲ್ಲ. ಬೋಧನಾ ಶುಲ್ಕ, ಬಸ್‌, ಮಕ್ಕಳ ಬಟ್ಟೆ, ಪುಸ್ತಕಕ್ಕೆ ಪ್ರತ್ಯೇಕವಾಗಿ ಹಣ ತೆಗೆದುಕೊಳ್ಳುತ್ತಿವೆ. ಹಗಲು ದರೋಡೆ ಮಾಡುತ್ತಿವೆ’ ಎಂದು ಆರೋಪಿಸಿದರು.

‘ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳೊಂದಿಗೆ ಪರೋಕ್ಷವಾಗಿ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಕೈಜೋಡಿಸಿದ್ದಾರೆ. ಹೀಗಾಗಿಯೇ ರಾಜಾರೋಷವಾಗಿ ಡೊನೇಷನ್‌ ಪಡೆಯಲಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ನಮ್ಮ ಸಂಘಟನೆಯ ವತಿಯಿಂದ ಅನೇಕ ವರ್ಷಗಳಿಂದ ಡೊನೇಷನ್‌ ಹಾವಳಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಆದರೆ, ಅಧಿಕಾರಿಗಳು ಮಾತ್ರ ಮೌನ ಜಾಣ ವಹಿಸಿದ್ದಾರೆ. ಇದೇ ಧೋರಣೆ ಮುಂದುವರೆಸಿದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಎಲ್ಲ ಶಾಲೆಗಳಲ್ಲಿ ಡೊನೇಷನ್‌ ವಿರೋಧಿ ಸಮಿತಿ ರಚಿಸಬೇಕು. ಶಾಲೆಗಳ ಮುಂದೆ ಬೋಧನಾ ಶುಲ್ಕ, ಅಭಿವೃದ್ಧಿ ಶುಲ್ಕ, ವಿಶೇಷ ಅಭಿವೃದ್ಧಿ ಶುಲ್ಕ ಮತ್ತು ಬಂಡವಾಳ ವೆಚ್ಚದ ವಿವರ ಸೂಚನಾ ಫಲಕದಲ್ಲಿ ಹಾಕಬೇಕು. ಬಿ.ಒ. ಕಚೇರಿಯಿಂದ ಡೊನೇಷನ್‌ ವಿರೋಧಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌.ಡಿ. ಜೋಷಿ,ಸಂಘಟನೆಯ ತಾಲ್ಲೂಕು ಅಧ್ಯಕ್ಷ ಕಿನ್ನಾಳ್‌ ಹನುಮಂತ, ಕಾರ್ಯದರ್ಶಿ ಕಲ್ಯಾಣಯ್ಯ, ಮುಖಂಡರಾದ ಇ. ಮಂಜುನಾಥ, ಬಂಡೆ ತಿರುಕಪ್ಪ, ಕೆ.ಎಂ. ಸಂತೋಷ್‌ ಕುಮಾರ್‌, ವಿಜಯಕುಮಾರ್‌, ರಾಜಚಂದ್ರಶೇಖರ್‌, ಪ.ಯ. ಗಣೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT