ಹೊಸಪೇಟೆ: ಇಲ್ಲಿನ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಭಾನುವಾರ ಇಳಿಮುಖಗೊಂಡಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆಸದ್ಯ 20,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಕಾಲುವೆಗಳಿಗೆ 4,810 ಕ್ಯುಸೆಕ್ ನೀರು ಬಿಡಲಾಗುತ್ತಿದೆ. 1,633 ಅಡಿ ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 1,632.05 ಅಡಿ ನೀರಿನ ಸಂಗ್ರಹವಾಗಿದೆ.
ಜಲಾನಯನ ಪ್ರದೇಶದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಒಳಹರಿವಿನಲ್ಲಿ ಏರಿಳಿತ ಉಂಟಾಗುತ್ತಿದೆ. ಭಾನುವಾರ 24,792 ಕ್ಯುಸೆಕ್ ಒಳಹರಿವು ದಾಖಲಾಗಿದೆ. ಶನಿವಾರ ನದಿಗೆ 50,000 ಕ್ಯುಸೆಕ್ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಂಪಿಯ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಮುಳುಗುವ ಹಂತಕ್ಕೆ ಬಂದಿದ್ದವು.
ಮುಂದುವರಿದ ಮಳೆ:ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಬಿರುಸಿನ ಮಳೆಯಾಗಿದೆ. ದಿನವಿಡೀ ದಟ್ಟ ಕಾರ್ಮೋಡ ಆವರಿಸಿಕೊಂಡು, ವಾತಾವರಣ ಸಂಪೂರ್ಣ ತಂಪಾಗಿತ್ತು.
ಶುಕ್ರವಾರ ರಾತ್ರಿ, ಶನಿವಾರ ಬೆಳಿಗ್ಗೆ ಸಹ ಬಿರುಸಿನ ಮಳೆಯಾಗಿತ್ತು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿರುವುದು ಹಾಗೆಯೇ ಇದೆ. ತಾಲ್ಲೂಕಿನ ಹಂಪಿ, ಕಮಲಾಪುರ, ಮಲಪನಗುಡಿ, ಕೊಂಡನಾಯಕನಹಳ್ಳಿ, ಹೊಸೂರು ಸೇರಿ ಹಲವೆಡೆ ವರ್ಷಧಾರೆಯಾಗಿದೆ.