ಬೆಂಗಳೂರು: ಜಗತ್ತು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಂಡು ಸುಧಾರಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ ನಡೆದ ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.
'ನಾವು ಜಾಗತಿಕ ಮಟ್ಟದ ಸ್ಪರ್ಧೆ ಎದುರಿಸುತ್ತಿದ್ದೇವೆ. ಅದಕ್ಕೆ ಪೂರಕವಾಗಿ ಶಿಕ್ಷಣ ವ್ಯವಸ್ಥೆ ಕೂಡ ಬದಲಾಗಬೇಕಿದೆ. ಮಗುವಿನ ಮೂರನೇ ವರ್ಷದಿಂದಲೇ ಶಿಕ್ಷಣ ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶಕ್ಕೆ ಬಲ ತುಂಬಲಿದೆ' ಎಂದರು.
ಯಾವುದೇ ಮಗುವನ್ನೂ ತಾರತಮ್ಯದಿಂದ ನೋಡದೇ ಶಿಕ್ಷಣ ನೀಡುವ ಕ್ರಮ ಜಾರಿಯಾಗಬೇಕಿದೆ. ಶಿಕ್ಷಕರು, ಪೋಷಕರು, ಸಮಾಜ ಎಲ್ಲರೂ ಈ ದಿಸೆಯಲ್ಲಿ ಯೋಚಿಸಿ, ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, 'ಸ್ವಾಮಿ ವಿವೇಕಾನಂದ ಅವರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಂಡರೆ ದೇಶ ಜಗತ್ತಿನಲ್ಲೇ ಮುಂಚೂಣಿಯಲ್ಲಿ ನಿಲ್ಲುತ್ತದೆ' ಎಂದರು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಜಿ. ಕುಮಾರ್ ನಾಯ್ಕ್, ಡಾ.ಶಾಲಿನಿ ರಜನೀಶ್, ಡಾ.ಇ.ವಿ. ರಮಣರೆಡ್ಡಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ಎಂ. ತಿಮ್ಮೇಗೌಡ, ನವೋದ್ಯಮಗಳಿಗೆ ಸಂಬಂಧಿಸಿದ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಉಪಸ್ಥಿತರಿದ್ದರು.