ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಇದೇ ಮುಂಗಾರು ಹಂಗಾಮಿಗೆ ಬಹು ಬೆಳೆಗಳ 2,35,865 ಬಿತ್ತನೆ ಬೀಜದ ಕಿಟ್ಗಳನ್ನು ವಿತರಿಸಲಾಗಿದೆ. ಹೆಚ್ಚಿನ ಪ್ರಮಾಣ ದ್ವಿದಳ ಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿ ಆರಂಭಗೊಂಡಿದ್ದು, ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಸಿಗಬೇಕು ಎಂಬ ಕಾರಣ ರಾಜ್ಯದ ಹಲವೆಡೆ ದಾಳಿ ಮಾಡಿ ನಕಲಿ ಬಿತ್ತನೆ ಬೀಜ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, 204 ಅಕ್ರಮ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಲಾಗಿದೆ. ಅಲ್ಲದೆ ₹4.24 ಕೋಟಿ ಮೌಲ್ಯದ ಕಳಪೆ ಬಿತ್ತನೆ ಬೀಜ ಮತ್ತು ಕೀಟನಾಶಕಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪಾಟೀಲ ಹೇಳಿದರು.
ಈ ವರ್ಷ ಈವರೆಗೆ 220 ಮಿ.ಮೀಟರ್ ಮಳೆಯಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.31 ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚು ಆಹಾರ ಧಾನ್ಯ ಬೆಳೆಯಲಾಗಿದೆ. ಒಟ್ಟು 77 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ರಾಜ್ಯದಲ್ಲಿ ಎಲ್ಲೂ ಬಿತ್ತನೆ ಬೀಜದ ಕೊರತೆ ಇಲ್ಲ. 12 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲೂ ಸಮಸ್ಯೆ ಕಂಡು ಬಂದಿಲ್ಲ. ವಿತರಣೆಗಾಗಿ ಸುಮಾರು 1.15 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆಎಂದು ಪಾಟೀಲ ತಿಳಿಸಿದರು.