ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ ಅವ್ಯವಹಾರ ನಡೆಸಿದ ಸಂಬಂಧ ಇದುವರೆಗೆ ಒಟ್ಟು 341 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 335 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದ್ದಾರೆ.
ಶಾಸಕ ರವಿಸುಬ್ರಹ್ಮಣ್ಯ ಅವರು ಕೇಳಿರುವ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಅನ್ನಭಾಗ್ಯ ಯೋಜನೆಯಲ್ಲಿ ಅಕ್ರಮ ನಡೆಸಿದವರ ವಿರುದ್ಧ ದಾಖಲಿಸಲಾದ ಪ್ರಕರಣಗಳ ವಿವರ ಒದಗಿಸಿದ್ದಾರೆ.
‘ಯೋಜನೆಯ ಫಲಾನುಭವಿಗಳಿಗೆ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿಕೊಂಡ ಸ್ಥಳಗಳಿಗೂ ದಾಳಿ ನಡೆಸಲಾಗಿದೆ. ಈ ಯೋಜನೆ ಆರಂಭವಾದ ಬಳಿಕ ಇದುವರೆಗೆ 2826.9 ಟನ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.