ಬೆಂಗಳೂರು: ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಹಾನಿಯಾಗಿ ನಷ್ಟಕ್ಕೀಡಾಗಿರುವ ರೈತರಿಗೆ ಪರಿಹಾರ ವಿತರಿಸಲು ₹ 74.67 ಕೋಟಿ ಬಿಡುಗಡೆ ಮಾಡಿ ಕೃಷಿ ಇಲಾಖೆಯು ಮಂಗಳವಾರ ಆದೇಶ ಹೊರಡಿಸಿದೆ.
ನಾಲ್ಕು ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಬೆಳೆ ಹಾನಿಯಾದ ಪ್ರಕರಣಗಳಲ್ಲಿ ಪರಿಹಾರ ವಿತರಣೆಗೆ ₹ 233 ಕೋಟಿ ಒದಗಿಸಲು ನಿರ್ಧರಿಸಲಾಗಿತ್ತು. ಮೊದಲ ಎರಡು ಕಂತುಗಳಲ್ಲಿ ₹ 148.33 ಕೋಟಿ ಒದಗಿಸಲಾಗಿತ್ತು. ಮೂರನೇ ಕಂತಿನಲ್ಲಿ ₹ 74.67 ಕೋಟಿ ಅನುದಾನ ಒದಗಿಸಲಾಗಿದೆ.
ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಪಾವತಿಸಲಾಗುವುದು ಎಂದು ಕೃಷಿ ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.