ಬೆಂಗಳೂರು: ‘ದಿನಬಳಕೆ ವಸ್ತುಗಳು, ಪೆಟ್ರೋಲ್ ಮತ್ತು ಡೀಸೆಲ್ಬೆಲೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಈ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮದ ಜತೆಗೆ ಎಳ್ಳು ನೀರು ತರ್ಪಣ ಬಿಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ತಿಳಿಸಿದರು.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಟ್ವಿಟರ್, ಫೇಸ್ಬುಕ್ ಸೇರಿದಂತೆ ಎಲ್ಲ ರೀತಿಯ ಸಾಮಾಜಿಕ ಜಾಲತಾಣಗಳಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಾರ್ಡ್ ಮಟ್ಟದಲ್ಲಿ ನಾಗರಿಕ ಸಭೆಗಳನ್ನು ಏರ್ಪಡಿಸಲಾಗುವುದು’ ಎಂದು ಅವರು ತಿಳಿಸಿದರು.