ಬೆಂಗಳೂರು: ಜಮೀನಿನ ತತ್ಕಾಲ್ ಪೋಡಿ ದಾಖಲೆ ಸಿದ್ಧಪಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹ 25,000 ಲಂಚ ಪಡೆಯುತ್ತಿದ್ದ ಆನೇಕಲ್ ತಾಲ್ಲೂಕು ಕಚೇರಿಯ ಭೂಮಾಪಕ ರತ್ನಕುಮಾರ್ ಕೆ.ಎಲ್. ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣನಾಯಕನಪುರ ಗ್ರಾಮದ ನಿವಾಸಿ ಪ್ರದೀಪ್ ಎಂಬುವವರು ಅದೇ ಗ್ರಾಮದಲ್ಲಿರುವ ತಮ್ಮ ಜಮೀನಿನ ತತ್ಕಾಲ್ ಪೋಡಿ ಮಾಡಿ, ದಾಖಲೆ ಸಿದ್ಧಪಡಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ₹ 25,000 ಲಂಚ ನೀಡುವಂತೆ ಭೂಮಾಪಕ ಬೇಡಿಕೆ ಇಟ್ಟಿದ್ದರು. ಈ ಕುರಿತು ಪ್ರದೀಪ್ ಎಸಿಬಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕಕ್ಕೆ ದೂರು ನೀಡಿದ್ದರು.
ಪ್ರದೀಪ್ ಅವರಿಂದ ರತ್ನಕುಮಾರ್ ಮಂಗಳವಾರ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ಗೋಪಾಲ್ ಜೋಗಿನ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.