ಬೆಂಗಳೂರು: ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಾಗೇನಹಳ್ಳಿ ಬಳಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ಚಿಕ್ಕಜಾಲ ನಿವಾಸಿ ಕಾರ್ತಿಕ್ (32) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ನೇಹಿತರೊಬ್ಬರನ್ನು ದೊಡ್ಡಬಳ್ಳಾಪುರದಲ್ಲಿ ಬಿಟ್ಟು ಮರಳಿ ಬರುತ್ತಿದ್ದ ವೇಳೆ ನಾಗೇನಹಳ್ಳಿ ಗೇಟ್ ಬಳಿ ಕಾರ್ತಿಕ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಮತ್ತೊಂದು ಕಾರಿಗೆ ಗುದ್ದಿದೆ. ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
‘ಇನ್ನೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ’ ಎಂದು ಯಲಹಂಕ ಸಂಚಾರ ಠಾಣೆ ಪೊಲೀಸರು ತಿಳಿಸಿದರು.