ಬೆಂಗಳೂರು: ರಾಜಾಜಿನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೈಕ್ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡು ಸವಾರ ಸುರೇಶ್ (45) ಎಂಬುವರು ಮೃತಪಟ್ಟಿದ್ದಾರೆ.
‘ಕುರುಬರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಅಂಬುಲೆನ್ಸ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಅಂಬುಲೆನ್ಸ್ ಜಪ್ತಿ ಮಾಡಲಾಗಿದೆ. ಚಾಲಕ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಸ್ಥಳೀಯ ನಿವಾಸಿ ಸುರೇಶ್, ಬೆಳಿಗ್ಗೆ 9 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೊರಟಿದ್ದರು. ಇದೇ ಸಂದರ್ಭದಲ್ಲಿ ಅಂಬುಲೆನ್ಸ್ ಪೂಜೆ ಮುಗಿಸಿದ್ದ ಚಾಲಕ, ರಸ್ತೆಗೆ ಚಲಾಯಿಸಿಕೊಂಡು ಬಂದಿದ್ದ. ರಸ್ತೆ ತಿರುವಿನಲ್ಲಿ ಅತೀ ವೇಗವಾಗಿ ಅಂಬುಲೆನ್ಸ್ ಚಲಾಯಿಸಿ, ಎದುರಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಸಿದ್ದ.’
‘ರಸ್ತೆಯಲ್ಲಿ ಬಿದ್ದು ತೀವ್ರ ಗಾಯಗೊಂಡ ಸುರೇಶ್ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸುರೇಶ್ ತೀರಿಕೊಂಡರು’ ಎಂದೂ ಮೂಲಗಳು ತಿಳಿಸಿವೆ.